ಗದಗ: ಮಹಾತ್ಮರ ಜೀವನ ದರ್ಶನದ ಸದುಪಯೋಗ ಪಡಿಸಿಕೊಂಡು ಜೀವನದ ಸಾರ್ಥಕತೆ ಪಡೆಯಬೇಕೆಂದು ಅಡ್ನೂರ- ರಾಜೂರ- ಗದಗ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
ಮನುಷ್ಯನ ಜೀವನದ ಕೊನೆಯ ಹಂತವೇ ಮರಣವಾಗಿದೆ. ಅವನ ಸಾವಿನ ಜತೆಗೆ ಯಾವುದೂ ಬರುವುದಿಲ್ಲ. ಅವನ ದೇಹತ್ಯಾಗದ ನಂತರ ಅವನ ಸನ್ನಢತೆ, ಸದಾಚಾರ, ಪರೋಪಕಾರ, ದಾನ, ಧರ್ಮ ಮಾರ್ಗದ ಬದುಕಿನ ಮೌಲ್ಯಗಳು ಉಳಿಯುತ್ತವೆ. ಆ ದಿಶೆಯಲ್ಲಿ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರ್ವರಲ್ಲಿ ಸಮಾನತೆ ಕಂಡು ಸಮನ್ವಯತೆ ಬೆಳೆಸಿಕೊಂಡು ಆರೋಗ್ಯಕರ ಜೀವನ ನಿರ್ವಹಿಸಬೇಕು. ಮನುಷ್ಯನ ಮನಸ್ಸನ್ನು ಹಸನಗೊಳಿಸಲು ಮಹಾತ್ಮರ ಪುಣ್ಯಪುರುಷರ ಸ್ಮರಣೆ ಅವಶ್ಯವಿದೆ ಎಂದರು.
ಶಿವಶಾಂತವೀರ ಶರಣರು ಮಾತನಾಡಿ, ಮನುಷ್ಯ ಜನ್ಮ ಶ್ರೇಷ್ಠವಾದದ್ದು, ಮನುಷ್ಯ ಮಹಾತ್ಮರ ದಾರ್ಶನಿಕರ ದಾರಿಯಲ್ಲಿ ಸಾಗಿ ಸತ್ಸಂಗ ಮಾಡಿ ತನ್ಮೂಲಕ ಅವರ ಸಿದ್ಧಾಂತಗಳನ್ನು ವಿಚಾರಗಳನ್ನು ಅಳವಡಿಸಿಕೊಂಡು ನಮ್ಮಲ್ಲಿಯ ಅಜ್ಞಾನ ದೂರಿಕರಿಸಿ ಸುಜ್ಞಾನದ ಬೆಳಕನ್ನು ಹೊಂದುವುದೇ ಸತ್ಸಂಗದ ಉದ್ದೇಶವಾಗಿದೆ ಎಂದರು.ಬಳೂಟಗಿಯ ಸಿದ್ದಯ್ಯ ಶಾಸ್ತ್ರಿಗಳಿಂದ ಪ್ರವಚನ ಸೇವೆ ಜರುಗಿತು. ಮುತ್ತು ಗದಗ, ಶರಣು ಕೆ. ಹಿರೇಮಠ ಅವರಿಂದ ಸಂಗೀತ ಸೇವೆ ಜರುಗಿತು. ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಿ.ಐ. ಅಸುಂಡಿ ದಂಪತಿಗಳನ್ನು ಸನ್ಮಾನಿಸಲಾಯಿತು. ಸವಡಿ ಗ್ರಾಮದ ಎಂ.ಬಿ. ಪರಡ್ಡಿ ಕುಟುಂಬ ವರ್ಗದವರಿಂದ ಹಾಗೂ ಸವಡಿ ಗ್ರಾಮದ ಸಮಸ್ತ ಸದ್ಭಕ್ತರಿಂದ ಶಿವಶಾಂತವೀರ ಶರಣರ ತುಲಾಭಾರದ ಭಕ್ತಿ ಸೇವೆ ಜರುಗಿತು. ಬಳಗಾನೂರಿನ ವೇದಾ ಶ್ರೀಧರ ಬಡಿಗೇರ, ವಿರಾಜ್ ಶ್ರೀಧರ ಬಡಿಗೇರ ಅವರ ನಾಣ್ಯ ತುಲಾಭಾರ ಹಾಗೂ ತೆಂಗಿನಕಾಯಿ ತುಲಾಭಾರದ ಭಕ್ತಿಸೇವೆಯ ಹಮ್ಮಿಣಿಯನ್ನು ಶ್ರೀಶರಣರಿಗೆ ಸಮರ್ಪಿಸಿದರು.ಸವಡಿಯ ಶ್ರೀಕಾಳಿಕಾ ಭಜನಾ ಸಂಘದವರು ಭಜನಾ ಪದಗಳನ್ನು ಪ್ರಸ್ತುತ ಪಡಿಸಿದರು. ತಾಪಂ ಮಾಜಿ ಅಧ್ಯಕ್ಷ ವಿ.ಎಸ್. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್. ಪುರಾಣಿಕಮಠ ಸ್ವಾಗತಿಸಿದರು. ಪ್ರಾ. ಪ್ರಕಾಶ ಬರದೂರ, ಶಿವಲಿಂಗಶಾಸ್ತ್ರಿ ಸಿದ್ದಾಪೂರ ನಿರೂಪಿಸಿದರು. ಬಿ.ವೈ. ಡೊಳ್ಳಿನ ವಂದಿಸಿದರು.