ಚನ್ನಪಟ್ಟಣ: ಹೆಚ್ಚಿನ ಉದ್ಯೋಗಾವಕಾಶ ಗ್ರಾಮೀಣಾಭಿವೃದ್ಧಿ ಹಾಗೂ ಜೀವನೋಪಾಯ ಕಲ್ಪಿಸುವ ಉದ್ದೇಶದಿಂದ ಹಲವು ಮಹತ್ವದ ಬದಲಾವಣೆಗಳ ಮೂಲಕ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಪ್ರತಿಯೊಬ್ಬ ಅರ್ಹ ಕುಟುಂಬ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜೆ.ಬ್ಯಾಡರಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ತಿಳಿಸಿದರು.
ದಿನಗೂಲಿ ಮೊತ್ತವನ್ನು ೩೭೦ರಿಂದ ೩೮೨ಕ್ಕೆ ಮಾಡಲಾಗಿದ್ದು, ಖಾತರಿಯನ್ನು ೧೦೦ ದಿನಗಳಿಂದ ೧೨೫ ದಿನಗಳಿಗೆ ವಿಸ್ತರಿಸಲಾಗಿದೆ. ಇದರ ಪರಿಣಾಮವಾಗಿ ಗ್ರಾಮೀಣ್ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಒಂದು ಕುಟುಂಬವು ವರ್ಷಕ್ಕೆ ಗರಿಷ್ಠ ೪೭,೭೫೦ ರೂ.ರವರೆಗೆ ಆದಾಯ ಗಳಿಸುವ ಅವಕಾಶವಿದೆ ಎಂದು ಮಾಹಿತಿ ನೀಡಿದರು.
ತಾಲೂಕು ಪಂಚಾಯಿತಿ ಐಇಸಿ ಸಂಯೋಜಕರಾದ ಭವ್ಯ ಅವರು ಮಾತನಾಡಿ, ಕಡ್ಡಾಯವಾಗಿ ಎನ್ಎಂಎಂಎಸ್ ಮೂಲಕ ಹಾಜರಾತಿ ದಾಖಲಿಸಬೇಕು. ಕೃಷಿ ಚಟುವಟಿಕೆಗಳಿಗೆ ೬೦ ದಿನಗಳ ವಿರಾಮದ ಅವಕಾಶ, ಅರ್ಹರಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ಯೋಜನೆಯ ವಿವಿಧ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದ್ದು, ಇವುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು ಹಾಗೂ ಎಸ್ಐಆರ್ ಕುರಿತು ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಪಂಚಾಯಿತಿ ಜಿಕೆಎಂ ಸುಮ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.