ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಿ: ಶಾಸಕ ಪಿ.ರವಿಕುಮಾರ್

KannadaprabhaNewsNetwork |  
Published : Dec 06, 2024, 08:59 AM IST
5ಕೆಎಂಎನ್ ಡಿ30 | Kannada Prabha

ಸಾರಾಂಶ

ಮಂಡ್ಯ ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಬಾವುಟಗಳನ್ನು ಎಲ್ಲೆಡೆ ರಾರಾಜಿಸುವಂತೆ ಮಾಡಿ ಮದುವಣಗಿತ್ತಿಯಂತೆ ಸಿಂಗಾರಗೊಳಿಸಿ ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಬೇಕು ಎಂದು ಶಾಸಕ ಹಾಗೂ ನಗರ ಅಲಂಕಾರ ಸಮಿತಿ ಅಧ್ಯಕ್ಷರೂ ಆದ ಪಿ.ರವಿಕುಮಾರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಗರ ಅಲಂಕಾರ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದ ರಸ್ತೆಗಳು, ಸರ್ಕಲ್ ಗಳಲ್ಲಿ ಹಾಗೂ ಮನೆಮನೆಗಳ ಮೇಲೂ ಕನ್ನಡದ ಬಾವುಟ ಹಾರಾಡಬೇಕು. ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮಕ್ಕೆ ಡಿ.6 ಅಥವಾ 7ರಂದು ಜಿ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುವುದು ಎಂದರು.

ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ಈ ತಿಂಗಳ ಪೂರ್ತಿ ಕನ್ನಡದ ಬಾವುಟ ಹಾರಾಡಲಿದೆ. ಇನ್ನೂ 10 ದಿನದೊಳಗೆ ನಗರದೆಡೆ ಕನ್ನಡದ ಬಾವುಟಗಳು ರಾರಾಜಿಸಬೇಕು. ಮೆರವಣಿಗೆ ಸಾಗುವ ಮಾರ್ಗದ ಸರ್ಕಲ್ ಗಳನ್ನು ಪುಷ್ಪಾಲಂಕಾರದಿಂದ ಸಿಂಗರಿಸಬೇಕು. ರಸ್ತೆಗಳು ತಳಿರು ತೋರಣದಿಂದ ಕಂಗೊಳಿಸಬೇಕು. ಗೋಡೆಗಳ ಮೇಲೆ ಕೆಂಪು ಹಳದಿ ಬಣ್ಣದ ಚಿತ್ರಾಲಂಕಾರ ಮೂಡಿಸಬೇಕು ಎಂದರು.

ನಗರದಲ್ಲಿ ದೀಪಾಲಂಕಾರವನ್ನು ಚೆಸ್ಕಾಂನವರೇ ವಹಿಸಿಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಪ್ರತಿ ಮಳಿಗೆಗಳ ವ್ಯಾಪಾರಸ್ಥರಿಗೆ ಕನ್ನಡದ ಶಾಲು ವಿತರಣೆ ಮಾಡಿ ಸಾಹಿತ್ಯ ಸಮ್ಮೇಳನದ ಕುರಿತು ಪ್ರಚಾರ ಮಾಡುವಂತೆ ಮನವಿ ಮಾಡಬೇಕು. ಈ ಸಂಬಂಧ ನಗರಸಭೆಯಿಂದ ಕರಪತ್ರ ಮುದ್ರಿಸಿ ಹಂಚಬೇಕು. ವ್ಯಾಪಾರಿಗಳು, ಸಾರ್ವಜನಿಕರು ಮನೆಯ ಹಬ್ಬದ ರೀತಿಯಲ್ಲಿ ಸಾಹಿತ್ಯ ಸಮ್ಮೇಳನ ಆಚರಿಸಿದಾಗ ಸಮ್ಮೇಳನ ಯಶಸ್ವಿ ಆಗಲಿದೆ ಎಂದರು.

ಡಿ.18ರಂದು ಶಾಲಾ, ಕಾಲೇಜು ಮಕ್ಕಳಿಂದ ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಹಮ್ಮಿಕೊಳ್ಳಲಾಗುವುದು. ಗ್ರಾಪಂ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸುವುದರ ಜೊತೆಗೆ ಕಟ್ಟಡವನ್ನು ಲೈಟಿಂಗ್ ನಿಂದ ಸಿಂಗರಿಸುವ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಂ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ನಗರಸಭೆ ಪೌರಾಯುಕ್ತರಾದ ಪಂಪಶ್ರೀ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ವಿಕಲಚೇತನರ ಇಲಾಖೆ ಅಧಿಕಾರಿ ಕೋಮಲ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ