ಕನ್ನಡಪ್ರಭ ವಾರ್ತೆ ಭಾರತೀನಗರ
ಜನರು ತಮ್ಮ ಸಮಸ್ಯೆ ಹೇಳಿಕೊಂಡು ಹಾಗೂ ಸರ್ಕಾರದ ಯೋಜನೆ ಪಡೆಯಲು ಅರ್ಜಿ ಹಿಡಿದು ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಾಲಾಜಿ ಸಮುದಾಯ ಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಜನರ ಸಮಸ್ಯೆ ಆಲಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜನರು ಅರ್ಜಿ ಹಿಡಿದು ಸರ್ಕಾರಿ ಕಚೇರಿಗೆ ಅಲೆದಾಡಬಾರದೆಂಬ ಉದ್ದೇಶ ನಮ್ಮದಾಗಿದೆ ಎಂದರು.
ಜಿಲ್ಲೆ ತಾಲೂಕು ಅಲ್ಲದೇ, ಹೋಬಳಿ ಮಟ್ಟದಲ್ಲೂ ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆ ಆಲಿಸಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ. ಈ ಭಾಗದಲ್ಲಿ ರೈತರ ಯಾವುದೇ ಸಮಸ್ಯೆಗಳಾಗಲಿ ಶಾಸಕ ಮಧು ಜಿ.ಮಾದೇಗೌಡರು ನೇರವಾಗಿ ನನಗೆ ಮತ್ತು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಅಥವಾ ಖುದ್ದು ಭೇಟಿನೀಡಿ ಸಮಸ್ಯೆ ಬಗೆಹರಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಭಾಗದಲ್ಲಿ ಅಷ್ಟು ಸಮಸ್ಯೆಗಳು ಇಲ್ಲವೆಂದು ನಾನು ಭಾವಿಸಿದ್ದೇನೆ. ಈ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆಗಳ ನಿವಾರಣೆಗೆ ನೀಡುವ ಅರ್ಜಿಗಳಿಗೆ 10 ದಿನದೊಳಗೆ ಉತ್ತರ ನೀಡಿ ವಿಲೇವಾರಿ ಮಾಡಬೇಕು. ಯಾವುದೇ ಅರ್ಜಿಗಳು ಉಳಿದುಕೊಳ್ಳಬಾರದು. ಪ್ರತಿಯೊಂದು ಸಮಸ್ಯೆಗಳಿಗೆ ಒಂದಲ್ಲ ಒಂದು ರೀತಿ ಪರಿಹಾರ ಇದ್ದೇ ಇರುತ್ತದೆ ಎಂದರು.
ರೈತರಿಗೆ ಸರ್ಕಾರದ ಸೌಲಭ್ಯ ಒದಗಿಸಿ:ಶಾಸಕ ಕೆ.ಎಂ.ಉದಯ್ ಮಾತನಾಡಿ, ಅರ್ಜಿಗಳನ್ನು ಹಿಡಿದು ನಾಡ ಕಚೇರಿ ಹಾಗೂ ತಾಲೂಕು ಕಚೇರಿಗಳಿಗೆ ಅಲೆಯುತ್ತಿರುವುದನ್ನು ತಪ್ಪಿಸಲು, ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮವನ್ನು ಜನಸಾಮಾನ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ರೈತರಿಗೆ ಪಶು ಸಂಗೋಪನೆ, ತೋಟಗಾರಿಕೆ, ಕೃಷಿ, ರೇಷ್ಮೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಪಾರದರ್ಶಕವಾಗಿ ಒದಗಿಸಿ ಎಂದು ಸೂಚಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು. ಈ ವೇಳೆ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲಾಯಿತು. ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಸ್ಮಾರ್ಟ್ಪೋನ್ ವಿತರಣೆ ಮಾಡಲಾಯಿತು.
ತೋಟಗಾರಿಕೆ ಇಲಾಖೆಯಿಂದ ತೆಂಗಿನ ಮರಕ್ಕೆ ತಗಲುವ ದುಂಬಿಯ ಉಪಟಳವನ್ನು ನಿಯಂತ್ರಿಸುವ ಸಲುವಾಗಿ ಉಚಿತವಾಗಿ ಮೋಹಕ ಬಲೆಗಳನ್ನು ವಿತರಣೆ ಹಾಗೂ ಹೊಸ ತೆಂಗಿನ ತೋಟಗಳ ಪುನಶ್ಚೇತನ ಪ್ರಾತ್ಯಕ್ಷತೆ ಕಾರ್ಯಕ್ರಮದಡಿ ರೈತರಿಗೆ ಉಚಿತವಾಗಿ ಸಾವಯವ ಪರಿಕರಗಳನ್ನು ವಿತರಣೆ ಮಾಡಲಾಯಿತು.ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಜನರು ತಮ್ಮ ಸಮಸ್ಯೆಗಳ ಕುರಿತು ಅಧಿಕಾರಿಗಳ ಬಳಿ ಅಹವಾಲು ಸಲ್ಲಿಸಿದರು. ಸುಮಾರು 181 ಅರ್ಜಿಗಳು ಸ್ವೀಕರಿಸಿದ್ದು ಬಹುಪಾಲು ಅರ್ಜಿಗಳು ಪಂಚಾಯತ್ ರಾಜ್ ಇಲಾಖೆಗೆ ಒಳಪಟ್ಟಿದ್ದು ಕಂಡು ಬಂತು.
ಸಭೆಯಲ್ಲಿ ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್, ಎ.ಸಿ.ಎಂ.ಶಿವಮೂರ್ತಿ, ತಹಸೀಲ್ದಾರ್ ಸೋಮಶೇಖರ್, ಗ್ರಾಪಂ ಅಧ್ಯಕ್ಷ ಕೌಶಲ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.