ಹೊಸದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿ, ಪೋಲಿಯೊ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕನ್ನಡಪ್ರಭ ವಾರ್ತೆ ಹೊಸದುರ್ಗ
ಐದು ವರ್ಷದೊಳಗಿನ ಪ್ರತಿಯೊಂದು ಮಗುವನ್ನೂ ಪೋಲಿಯೊ ರೋಗದಿಂದ ರಕ್ಷಿಸುವ ಉದ್ದೇಶದಿಂದ ಜೂ.28 ರಂದು ನಡೆಯುವ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದಲ್ಲಿ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಮಂಜುನಾಥ್ ಕರೆ ನೀಡಿದರು.
ಆರೋಗ್ಯ ಇಲಾಖೆ ಹಾಗೂ ನಗರದ ನರ್ಸಿಂಗ್ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಹೊಸದುರ್ಗ ಪಟ್ಟಣದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಾಟೀಲ್ ಮಾತನಾಡಿ, ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದು, ಈ ಸಾಧನೆಯನ್ನು ಮುಂದುವರಿಸಲು ದೇಶಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೊಸದುರ್ಗ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ವಿವಿಧೆಡೆ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪೋಷಕರು ಐದು ವರ್ಷದೊಳಗಿನ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಗಳಿಗೆ ಕರೆತಂದು ಪೋಲಿಯೊ ಹನಿ ಹಾಕಿಸಬೇಕು ಎಂದರು .
ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿ, ಪೋಲಿಯೊ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಆರ್ಬಿಎಸ್ಕೆ ವೈದ್ಯರಾದ ಡಾ. ಗುರುದೇವ್, ಡಾ. ಚೈತ್ರ ಹಾಗೂ ತಂಡ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ, ಲೇಪಾಕ್ಷಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕುಸುಮಾ, ಇಂದಿರಾಗಾಂಧಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕರಾದ ಜ್ಯೋತಿ, ದಿವ್ಯಾ, ಸುಪ್ರೀತಾ, ನಗರದ ಆಶಾ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.