ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಯಶಸ್ವಿಗೊಳಿಸಿ: ಉಪವಿಭಾಗಾಧಿಕಾರಿ

KannadaprabhaNewsNetwork |  
Published : Jun 03, 2026, 02:30 AM IST
ಭಟ್ಕಳ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಲಾಯಿತು. | Kannada Prabha

ಸಾರಾಂಶ

ಮತದಾರರ ಪಟ್ಟಿಯನ್ನು ನಿಖರ, ಪಾರದರ್ಶಕ ಹಾಗೂ ದೋಷರಹಿತವಾಗಿ ಸಿದ್ಧಪಡಿಸುವ ಉದ್ದೇಶದಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಚುನಾವಣಾ ಸಿಬ್ಬಂದಿ ನಡುವೆ ಸಮನ್ವಯ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಸಹಕಾರ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಭಟ್ಕಳ

ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಮುಖರೊಂದಿಗೆ ಮಂಗಳವಾರ ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಮತದಾರರ ನೋಂದಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಜಿ. ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದ ಪೂರ್ವಸಿದ್ಧತೆ, ಪರಿಷ್ಕರಣೆಯ ವೇಳಾಪಟ್ಟಿ, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕರ್ತವ್ಯಗಳು ಹಾಗೂ ಬೂತ್ ಮಟ್ಟದ ಏಜೆಂಟರ (ಬಿಎಲ್‌ಎ) ಪಾತ್ರ ಮತ್ತು ಜವಾಬ್ದಾರಿಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.

ಮತದಾರರ ಪಟ್ಟಿಯನ್ನು ನಿಖರ, ಪಾರದರ್ಶಕ ಹಾಗೂ ದೋಷರಹಿತವಾಗಿ ಸಿದ್ಧಪಡಿಸುವ ಉದ್ದೇಶದಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಚುನಾವಣಾ ಸಿಬ್ಬಂದಿ ನಡುವೆ ಸಮನ್ವಯ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಸಹಕಾರ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.

ಹೊಸ ಮತದಾರರ ಹೆಸರು ಸೇರ್ಪಡೆ, ಮತದಾರರ ವಿವರಗಳ ತಿದ್ದುಪಡಿ, ಸ್ಥಳಾಂತರಗೊಂಡಿರುವ ಮತದಾರರ ಮಾಹಿತಿಯ ನವೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು, ಬಿಎಲ್‌ಒಗಳು ಸಹ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸುವ ಮೂಲಕ ಸಹಕರಿಸಬೇಕೆಂದು ಸೂಚಿಸಲಾಯಿತು.

ಮತದಾರರ ಪಟ್ಟಿಯ ಗುಣಮಟ್ಟ ಹೆಚ್ಚಿಸುವಲ್ಲಿ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಸಭೆಯಲ್ಲಿ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಚುನಾವಣೆ ವಿಭಾಗದ ಶಿರಸ್ತೇದಾರ ರಾಧಿಕಾ ಶಾಸ್ತ್ರಿ, ಕಚೇರಿ ಸಿಬ್ಬಂದಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷಗಳ ಮುಖಂಡರು ತಮ್ಮ ಸಲಹೆ ಹಾಗೂ ಅಭಿಪ್ರಾಯ ಹಂಚಿಕೊಂಡರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸುವಂತೆ ಅಧಿಕಾರಿಗಳು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಷ್ಠೆ ಇದ್ದರೆ ಯಶಸ್ವಿ ಉದ್ಯಮ ಸಾಧ್ಯ: ಅಬೀದ್ ಗದ್ಯಾಳ
ಆನಂದಶರದಿ ಪಾರಮಾರ್ಥಿಕ ಸಾಧನೆಗೆ ಪ್ರೇರಣೆಯಾಗಲಿ: ಕೃಷ್ಣಾಪುರ ಶ್ರೀ