ರಾಮನಗರ: ಜಿಲ್ಲೆಯಲ್ಲಿ ನವೆಂಬರ್ 03 ರಿಂದ 19ರ ವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಥಮಿಕ ಹಂತದಲ್ಲೇ ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚಿ, ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸುವ ಮೂಲಕ ಜಿಲ್ಲೆಯನ್ನು 2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ 74 ಕುಷ್ಠರೋಗ ಪ್ರಕರಣಗಳು ಕಂಡುಬಂದಿದ್ದು, ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ, 60 ಪ್ರಕರಣಗಳಲ್ಲಿ ಕುಷ್ಠರೋಗದಿಂದ ಸಂಪೂರ್ಣ ಗುಣಮುಖ ಹೊಂದಿರುತ್ತಾರೆ. ಪ್ರಸ್ತುತ 14 ಸಕ್ರಿಯ ಕುಷ್ಠರೋಗ ಪ್ರಕರಣಗಳಿದ್ದು, ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮದಡಿ 74 ಕುಷ್ಠರೋಗ ಪ್ರಕರಣಗಳು ಕಂಡುಬಂದ 85 ಹಳ್ಳಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಸಮೀಕ್ಷೆ ಕೈಗೊಂಡು ಕುಷ್ಠರೋಗ ಸಂಪರ್ಕಿತರನ್ನು ಪರೀಕ್ಷಿಸಲಿದ್ದಾರೆ ಎಂದು ಹೇಳಿದರು.ಕುಷ್ಠರೋಗಗಳಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕು ಎಂದ ಅವರು ಪ್ರಾಥಮಿಕ ಹಂತದಲ್ಲೇ ಕುಷ್ಠರೋಗವನ್ನು ಗುರುತಿಸಿ, ರೋಗಿಯು ನಿಯಮಿತವಾಗಿ ಚಿಕಿತ್ಸೆ ಪಡೆದಲ್ಲಿ (ಎಂ.ಡಿ.ಟಿ) ಸಂಪೂರ್ಣವಾಗಿ ಕುಷ್ಠರೋಗವನ್ನು ಗುಣಪಡಿಸಬಹುದು. ಕುಷ್ಠರೋಗವು ಮೈಕೋಬ್ಯಾಕ್ಟಿರಿಯಂ ಲೆಪ್ರ ಎಂಬ ರೋಗಾಣುವಿನಿಂದ ಉಂಟಗುವ ಸಾಂಕ್ರಾಮಿಕ ರೋಗ. ಇದು ಮುಖ್ಯವಾಗಿ ನರಗಳು ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಚರ್ಮದ ಮೇಲ್ಭಾಗದಲ್ಲಿ ಮಚ್ಚೆಗಳು, ಗಂಟುಗಳು, ಹುಣ್ಣುಗಳು ಕಂಡಬಂದಲ್ಲಿ ಸಮೀಪದ ಸರ್ಕಾರ ಆರೋಗ್ಯ ಸಂಸ್ಥೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬಹುದು. ಕುಷ್ಠರೋಗ ಪ್ರಕರಣ ಪತ್ತೆಯಾದಲ್ಲಿ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ ಎಂದು ಚಂದ್ರಯ್ಯ ತಿಳಿಸಿದರು.
----------------------------
15ಕೆಆರ್ ಎಂಎನ್ 4.ಜೆಪಿಜಿರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯರವರ ಅಧ್ಯಕ್ಷತೆಯಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು.
-----------------------------