ಕನ್ನಡಪ್ರಭ ವಾರ್ತೆ ಹಾಸನ
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ವಾದ್ವಾನಿ ಫೌಂಡೇಷನ್ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು-ಸ್ವಾಯತ್ತ ಕಾಲೇಜಿನಲ್ಲಿ ಫೆ. ೧೮ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ ಹಾಗೂ ಬೋಧಕರಿಗೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾಭ್ಯಾಸ ಮಾತ್ರ ನೀಡುವುದಲ್ಲದೆ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕಾಗಿದೆ. ಆದ್ದರಿಂದ ಇಂತಹ ಕಾರ್ಯಾಗಾರಗಳು ಉಪಯುಕ್ತವಾಗಿವೆ. ಇಂದು ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಿವೆ. ಅವುಗಳನ್ನು ಪಡೆದುಕೊಳ್ಳುವ ಕೌಶಲ್ಯಗಳು ವಿದ್ಯಾರ್ಥಿಗಳಲ್ಲಿ ಇರಬೇಕು ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾಲೇಜಿನ ಶೈಕ್ಷಣಿಕ ಡೀನ್ ಪ್ರೊ. ರಾಜು ಡಿ.ಎಎಸ್, ಉದ್ಯೋಗ ಮನುಷ್ಯ ಲಕ್ಷಣಂ ಎನ್ನುವ ಹಾಗೆ ಇಂದು ಉದ್ಯೋಗ ಹೆಣ್ಣು-ಗಂಡು ಎನ್ನುವಂತಿಲ್ಲ ಎಲ್ಲರಿಗೂ ಬೇಕು. ಸಮಾನತೆಯ ದಿಕ್ಕಿನಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಪಡೆದುಕೊಳ್ಳುವ ಗುರಿ ಇರಬೇಕು. ಶಿಕ್ಷಣದ ಜೊತೆ ಜೊತೆಯಲ್ಲಿ ಉದ್ಯೋಗದ ಸಂಬಂಧಿ ತರಬೇತಿ ನೀಡುವ ಸರ್ಕಾರದ ಈ ಕಾರ್ಯಾಗಾರ ಯಶಸ್ವಿಯಾಗಬೇಕು ಎಂದು ಹೇಳುತ್ತಾ, ಕಾಲೇಜು ನಡೆದು ಬಂದ ದಾರಿಯ ಸವಿಸ್ತಾರ ಮಾಹಿತಿ ನೀಡಿದರು.ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಡಾ. ಎಂ.ಬಿ. ಇರ್ಷಾದ್ ಮಾತನಾಡಿ, ಗುರುವಿನ ಗುಲಾಮನಾಗುವ ತನಕ ದೊರೆಯದಯ್ಯ ಮುಕುತಿ ಎಂಬಂತೆ ಕಲಿತದ್ದು ಎಂದು ಅಳಿಸುವುದಿಲ್ಲ. ವಿವಿಧ ಕಾಲೇಜಿನಿಂದ ಕಾರ್ಯಾಗಾರದಲ್ಲಿ ತೊಡಗಿಸಿಕೊಂಡಿರುವ ಅಧ್ಯಾಪಕರು ಇದರ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳ ಗಮನ ಸೆಳೆಯಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಕಲಾಶ್ರೀ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಬೆಂಗಳೂರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಅಪ್ಪಾಜಿಗೌಡ ಹಾಗೂ ವಾದ್ವಾನಿ ಫೌಂಡೇಷನ್ ಮಾಸ್ಟರ್ ಟ್ರೈನರ್ ಸ್ವಾತಿ ಪುತ್ರನ್ ರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.