ಲೋಪಗಳಾಗದಂತೆ ಅಧಿವೇಶನ ಯಶಸ್ವಿಗೊಳಿಸಿ

KannadaprabhaNewsNetwork |  
Published : Nov 20, 2025, 01:45 AM IST
ವಿಧಾನಸಭೆ, ವಿಧಾನಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಮತ್ತಿತರ ಸ್ಥಳಗಳನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ ಮತ್ತು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಶೀಲಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ವಿಧಾನಮಂಡಳದ ಚಳಿಗಾಲ ಅಧಿವೇಶನದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಧಾನಮಂಡಳದ ಚಳಿಗಾಲ ಅಧಿವೇಶನದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚಿಸಿದರು.

ಸುವರ್ಣವಿಧಾನಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಅಧಿವೇಶನದ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಡಿ.8 ರಿಂದ 19ರವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ‌, ಸಿಬ್ಬಂದಿ ಬದ್ಧತೆಯೊಂದಿಗೆ ಕಾರ್ಯ‌ನಿರ್ವಹಿಸುವ ಮೂಲಕ ಅಧಿವೇಶನ ಯಶಸ್ವಿಗೊಳಿಸಬೇಕು. ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಕೂಡಲೇ ಸಂಬಂಧಿತರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.

ನೆಟ್‌ವರ್ಕ್ ಸಮಸ್ಯೆ ತಲೆದೋರದಂತೆ ನಿಗಾವಹಿಸಬೇಕು. ಅಗತ್ಯ ಗಣಕಯಂತ್ರ ಸೇರಿ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ ಸೂಕ್ತ ಸ್ಥಳಾವಕಾಶ ಗುರುತಿಸುವ ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಅಗತ್ಯ ಸೌಲಭ್ಯ‌ ಹಾಗೂ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು‌ ಕ್ರಮ ವಹಿಸಬೇಕು ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರಿಗೆ ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಮಾರ್ಷಲ್‌ಗಳಿಗೆ ಸೂಕ್ತ ಸಾರಿಗೆ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅಧಿವೇಶನ‌ ವೇಳೆ ಸಚಿವರು, ಶಾಸಕರು ತಂಗುವ ಹೋಟೆಲ್‌ಗಳಲ್ಲಿ ತಜ್ಞ ವೈದ್ಯರ ತಂಡ ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ‌ ಸೌಧದಲ್ಲಿಯೂ ವೈದ್ಯರ ತಂಡವನ್ನು ಸುಸಜ್ಜಿತ ಆಂಬ್ಯುಲೆನ್ಸ್‌ನೊಂದಿಗೆ ನಿಯೋಜಿಸುವಂತೆ ತಿಳಿಸಿದರು.

ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಯ್ದ 30 ವಿದ್ಯಾರ್ಥಿಗಳ ತಂಡಕ್ಕೆ ವಿಧಾನ ಮಂಡಲದ ಕಾರ್ಯ ಕಲಾಪಗಳ ಮಾಹಿತಿ ಪಡೆಯಲು ಅನುಕೂಲವಾಗುವಂತೆ ವೀಕ್ಷಣೆಗೆ ಹೆಚ್ಚಿನ ಸಮಯ ನಿಗದಿಪಡಿಸಲಾಗುವುದು. ಅದರ ಪ್ರಕಾರ ಅವರಿಗೆ ಅವಕಾಶವನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪೂರ್ವ ತಯಾರಿ ಕುರಿತು ವಿವರಿಸಿದರು. ಕಳೆದ ಬಾರಿಯಂತೆ ಹನ್ನೆರೆಡು ಸಮಿತಿಗಳನ್ನು ರಚಿಸಿದ್ದು, ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪೊಲೀಸ್‌ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ ಮಾತನಾಡಿ, ಅಧಿವೇಶನದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸೂಕ್ತ ಪೊಲೀಸ್ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸ್ ಭದ್ರತೆಗೆ ಸಂಬಂಧಿಸಿದಂತೆ ಬೇರೆ ಜಿಲ್ಲೆಗಳಿಂದ‌ ಹೆಚ್ಚುವರಿ ಪೋಲಿಸ್ ಸಿಬ್ಬಂದಿ ಅಧಿವೇಶನಕ್ಕೆ ನಿಯೋಜಿಸಲಾಗುತ್ತಿದೆ.‌ ಅಧಿವೇಶನ‌ ಸಂದರ್ಭದಲ್ಲಿ ನಿಯೋಜಿತ ಪೋಲಿಸ್ ಸಿಬ್ಬಂದಿ‌ ಅಧಿಕಾರಿಗಳಿಗಾಗಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ರಾಜು(ಆಸೀಫ್) ಸೇಠ್‌, ವಿಧಾನಸಭೆ ಕಾರ್ಯದರ್ಶಿ ಆರ್.ವಿಶಾಲಾಕ್ಷಿ, ವಿ. ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ, ಎಸ್ಪಿ ಡಾ.ಭೀಮಾಶಂಕರ ಗುಳೇದ, ಜಿಪಂ ಸಿಇಒ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ‌ ಬಸವರಾಜ ಹೊರಟ್ಟಿ ರಾಷ್ಟ್ರೀಯ ಐಕ್ಯತಾ ಪ್ರಮಾಣ‌ ವಚನ ಬೋಧಿಸಿದರು.

ನಂತರ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಮತ್ತಿತರ ಸ್ಥಳಗಳನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ ಮತ್ತು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಶೀಲಿಸಿ, ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕೋಟ್‌

ಸುವರ್ಣ ವಿಧಾನ‌ಸೌಧದಲ್ಲಿ ಸೂಕ್ತ ಭದ್ರತೆ ಹಾಗೂ ಸುಗಮ‌ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು. ಅಧಿವೇಶನ ಸಂದರ್ಭದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಕಳೆದ‌ ಬಾರಿಯಂತೆ ಸಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಸುವರ್ಣ ವಿಧಾನಸೌಧದ ಆವರಣದಲ್ಲಿ ಕಳೆದ ಬಾರಿ ಶಾಸಕರು ಸಸಿಗಳನ್ನು ನೆಟ್ಟಿದ್ದು, ಈ ಬಾರಿಯೂ ಪ್ರತಿ ಶಾಸಕರಿಂದ ಸಸಿಗಳನ್ನು ನೆಡಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು.

ಯು.ಟಿ.ಖಾದರ್‌, ವಿಧಾನಸಭೆ ಸಭಾಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ