ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Mar 13, 2026, 02:15 AM IST
12ಎಚ್‌ವಿಆರ್3- | Kannada Prabha

ಸಾರಾಂಶ

1995ರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವ ಕನ್ನಡ ಶಾಲೆಗಳನ್ನು ಗುರುತಿಸಿ, ರಾಜ್ಯ ಸರ್ಕಾರದ ಅನುದಾನಕ್ಕೊಳಪಡಿಸಿ ವೇತನ ಅನುದಾನ ನೀಡಬೇಕು ಎಂದು ಅಖಿಲ ಕರ್ನಾಟಕ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಘಟಕದಿಂದ ಗುರುವಾರ ಹಾವೇರಿಯ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಲಾಯಿತು.

ಹಾವೇರಿ: 1995ರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವ ಕನ್ನಡ ಶಾಲೆಗಳನ್ನು ಗುರುತಿಸಿ, ರಾಜ್ಯ ಸರ್ಕಾರದ ಅನುದಾನಕ್ಕೊಳಪಡಿಸಿ ವೇತನ ಅನುದಾನ ನೀಡಬೇಕು ಎಂದು ಅಖಿಲ ಕರ್ನಾಟಕ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಘಟಕದಿಂದ ಗುರುವಾರ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಒಕ್ಕೂಟದ ಜಿಲ್ಲಾಧ್ಯಕ್ಷ ನೀಲಪ್ಪ ಚಾವಡಿ ಮಾತನಾಡಿ, ಕಳೆದ 30 ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದ ಕನ್ನಡ ಶಾಲೆಗಳು ಸ್ಥಾಪಿತಗೊಂಡಿವೆ. 1995ರಿಂದ ಇಲ್ಲಿಯ ವರೆಗೂ ಮಕ್ಕಳಿಗೆ ಶಿಕ್ಷಣ ಕೊಡುತ್ತಿರುವ ಖಾಸಗಿ ಶಾಲೆಗಳು ಸರ್ಕಾರದಿಂದ ಯಾವುದೇ ಅನುದಾನವಿಲ್ಲದೇ ಸಂಕಷ್ಟದಲ್ಲಿವೆ. ಚುನಾವಣೆ ಪೂರ್ವದಲ್ಲಿ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಭರವಸೆ ನೀಡಿದ್ದ ಸರ್ಕಾರ ನಿಷ್ಕಾಳಜಿ ವಹಿಸುತ್ತಿದೆ. ಜಿಲ್ಲೆಯಲ್ಲಿ 352 ಅನುದಾನರಹಿತ ಖಾಸಗಿ ಕನ್ನಡ ಶಾಲೆಗಳು, 43 ಅನುದಾನರಹಿತ ಖಾಸಗಿ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಖಾಸಗಿ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥ ಸಿದ್ದರಾಜ ಕಲಕೋಟಿ ಮಾತನಾಡಿ, ಈ ಹಿಂದೆ ಗ್ರಾಮೀಣ ಹಾಗೂ ನಗರ ಪ್ರದೇಶದ ಬಡವರಿಗೆ ಆಸರೆಯಾಗಿದ್ದ ಆರ್‌ಟಿಇ (ಶಿಕ್ಷಣ ಹಕ್ಕು ಕಾಯಿದೆ)ಯನ್ನು ಪುನಃ ಜಾರಿಗೆ ತರಬೇಕು. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ವಿಧಿಸಿರುವ ಮಾರ್ಗಸೂಚಿಗಳನ್ನು ಸರಳೀಕರಣ ಮಾಡಬೇಕು. ಆರ್‌ಟಿಇ ಕಾಯಿದೆ ಅಡಿಯಲ್ಲಿ ಆಯ್ಕೆಯಾದ ಶಾಲೆಗಳಿಗೆ ಬರಬೇಕಾದ ಶುಲ್ಕ ಮರುಪಾವತಿ ಹಣವನ್ನು ಈ ಕೂಡಲೇ ಎಲ್ಲ ಶಾಲೆಗಳಿಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಡಾ. ಬಿ.ಆರ್. ಅಂಬೇಡ್ಕರ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಎಸ್. ಮಾಳಗಿ ಮಾತನಾಡಿ, ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಖಾಸಗಿ ಶಾಲೆಗಳಿಗೆ ಅನುದಾನ ಮೀಸಲಿಡುವ ಪ್ರಸ್ತಾಪ ಮಾಡಿಲ್ಲ. ಇರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳಿಗೆ ವಿಲೀನ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುರಿಗೆಪ್ಪ ಶೆಟ್ಟರ, ಸುರೇಶ ಬಿಷ್ಟನಗೌಡ್ರ, ತಿಪ್ಪೇಸ್ವಾಮಿ ಹೊಸಮನಿ, ಮುತ್ತಯ್ಯ ಕಿತ್ತೂರಮಠ, ಮಂಜುನಾಥ ಮಡಿವಾಳರ ಹಾಗೂ ಕರ್ಜಗಿ, ಬಸಾಪುರ, ಹೊಸರಿತ್ತಿ, ಮೇವುಂಡಿ, ರಾಣಿಬೆನ್ನೂರು, ಹಾನಗಲ್ಲ ಸೇರಿದಂತೆ ವಿವಿಧ ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಸಿಬ್ಬಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾಟೆ ಸ್ವಯಂ ರಕ್ಷಣೆಗೆ ಆಗತ್ಯ
ಕಾಳಸಂತೆಯಲ್ಲಿ ಸಿಲಿಂಡರ್‌ ಮಾರಾಟ: ಕ್ರಮಕ್ಕೆ ಆಗ್ರಹ