ಕನ್ನಡಪ್ರಭ ವಾರ್ತೆ ರಾಮನಗರನಗರದ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು ನೀಡುವ ಮೂಲಕ ನಗರಸಭೆಯನ್ನು ಜನಸ್ನೇಹಿಯನ್ನಾಗಿಸಲು ಶ್ರಮಿಸುವುದಾಗಿ ನಗರಸಭೆ ನೂತನ ಅಧ್ಯಕ್ಷ ಕೆ. ಶೇಷಾದ್ರಿ ಹೇಳಿದರು.ನಗರದ ವಿವಿಧ ಬಡಾವಣೆಗಳ ಮುಖಂಡರು ಹಾಗೂ ನಾಗರಿಕರಿಂದ ಅಭಿನಂದನೆ ಸ್ವೀಕರಿಸಿದ ನಂತರ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ನಿವಾರಣೆ ಸಂಬಂಧ ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ ಎಂದರು.ನಗರದ ಸ್ವಚ್ಛತೆಗೆ ಆದ್ಯತೆ ಕೊಡುವುದರ ಮೂಲಕ ಪರಿಸರ ಸ್ನೇಹಿ ವಾತಾವರಣ ಸೃಷ್ಟಿಸಲಾಗುವುದು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ಹೊಂದಿದ್ದೇನೆ. ಆಡಳಿತಾರೂಢ ಸದಸ್ಯರ ಜತೆಗೆ ವಿರೋಧ ಪಕ್ಷದವರ ಸಹಕಾರ ಪಡೆದು ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಇಕ್ಬಾಲ್ ಹುಸೇನ್ ಅವರ ಸಹಕಾರದಲ್ಲಿ ಅಭಿವೃದ್ಧಿಗೆ ವೇಗ ನೀಡಲಿದ್ದೇನೆ ಎಂದು ಶೇಷಾದ್ರಿ ಹೇಳಿದರು.ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಅಜ್ಮತ್, ಸದಸ್ಯರಾದ ನರಸಿಂಹ, ಆರೀಫ್, ನಾಗಮ್ಮ, ಮಾಜಿ ಸದಸ್ಯ ಸುರೇಶ್ (ದೊಡ್ಡಿ ಸುರೇಶ್), ಮುಖಂಡರಾದ ಶಿವಕುಮಾರ ಸ್ವಾಮಿ, ಮುಖಂಡರಾದ ಗಿರೀಶ್, ಲಕ್ಷ್ಮಣ್, ಯಶವಂತರಾವ್, ಸುಬ್ರಮಣಿ, ಗುಂಡಪ್ಪ, ಶ್ರೀಧರ್, ದಯಾ, ಜಯಣ್ಣ, ಲೋಕೇಶ್, ಸಮದ್, ವಿಜಿ, ಸಿದ್ದರಾಜು ಮತ್ತಿತರರು ಹಾಜರಿದ್ದರು.