ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್ ರಾಜ್ ನೇತೃತ್ವದಲ್ಲಿ ಸೇರಿದ ಸದಸ್ಯರು ನಾಡ ಕಚೇರಿಯಲ್ಲಿ ಇರುವ ನ್ಯೂನತೆಗಳನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎನ್.ಎಲ್.ಭರತ್ ರಾಜ್ ಮಾತನಾಡಿ, ಪಂಡಿತಹಳ್ಳಿ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ರಜೆ ಮೇಲೆ ತೆರಳಿ 15 ದಿನಗಳ ಕಳೆದಿದೆ. ರೈತರು ತಮ್ಮ ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ. ಸರ್ಕಾರ ಒಂದೆಡೆ ಆಡಳಿತ ಯಂತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಕೊಂಡೊಯ್ಯುತ್ತೇವೆ ಎಂದು ಹಲವು ಯೋಜನೆ ಜಾರಿಗೆ ತಂದರೂ ಅಧಿಕಾರಿಗಳ ದುರಾಡಳಿತದಿಂದ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪಂಡಿತಹಳ್ಳಿಯ ನಾಡಕಚೇರಿಗೆ ಕನಿಷ್ಠ ಮೂಲ ಸೌಕರ್ಯ ಕಲ್ಪಿಸುವಲ್ಲಿ ತಾಲೂಕು ಆಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ತಾಲೂಕಿನ ಹಲವೆಡೆ ನಾಡಕಚೇರಿಗಳಲ್ಲಿ ಸುಸಜ್ಜಿತ ಕಟ್ಟಡಗಳಿಲ್ಲ, ವಿದ್ಯುತ್ ಪರಿಕರಗಳು ಸೇರಿದಂತೆ ಸವಲತ್ತುಗಳಿಲ್ಲ, ಮತ್ತೊಂದೆಡೆ ಸಿಬ್ಬಂದಿ ಕೊರತೆ ಕಾಡುತ್ತಿದೆ ಎಂದು ದೂರಿದರು.
ಸಹ ಸಂಚಾಲಕ ಎನ್.ಲಿಂಗರಾಜಮೂರ್ತಿ ಮಾತನಾಡಿ, ಕಚೇರಿಯಲ್ಲಿ ಯುಪಿಎಸ್ ಸೌಲಭ್ಯವಿಲ್ಲ. ವಿಷಯ ನಿರ್ವಾಹಕರು ಇಲ್ಲದೇ ಯಾವ ಕೆಲಸವೂ ಆಗುತ್ತಿಲ್ಲ. ಹೀಗಾಗಿ ಅಲ್ಲಿಗೆ ಕನಿಷ್ಠ ಮೂಲ ಸೌಕರ್ಯ ಕಲ್ಪಿಸಬೇಕು. ಕೂಡಲೇ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.