ಮಳವಳ್ಳಿ: ಕಿಚ್ಚು ಹಾಯಿಸಿ ಸಂಕ್ರಾಂತಿ ಹಬ್ಬ ಆಚರಣೆ

KannadaprabhaNewsNetwork |  
Published : Jan 16, 2026, 12:30 AM IST
15ಕೆಎಂಎನ್ ಡಿ28 | Kannada Prabha

ಸಾರಾಂಶ

ಜಾನುವಾರುಗಳನ್ನು ಬೆಂಕಿಯ ಮೂಲಕ ಹಾಯಿಸುವ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗ್ರಾಮೀಣ ಪ್ರದೇಶದಲ್ಲಿನ ಹಬ್ಬವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ತೊಟ್ಟು ಮನೆ ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ, ಕೊಬ್ಬರಿ, ಕಬ್ಬು ನೀಡಿ ಆಚರಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ಪ್ರಮುಖ ಬಡಾವಣೆಗಳು ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಎಲ್ಲೆಡೆ ರೈತರು ತಮ್ಮ ರಾಸುಗಳಿಗೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಸಂಕ್ರಾಂತಿ ಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಿದರು.ಕೇವಲ ಧಾರ್ಮಿಕ ಹಬ್ಬವಲ್ಲದೇ ಕೃಷಿ ಸಮುದಾಯದ ಜೀವನ ಮತ್ತು ಪ್ರಕೃತಿಯ ಬದಲಾವಣೆಯನ್ನು ಸಂಭ್ರಮಿಸುವ ಸಂಕ್ರಾಂತಿ ಹಬ್ಬದ ಅಂಗವಾಗಿ ಪಟ್ಟಣದ ಗಂಗಾಧರೇಶ್ವರಸ್ವಾಮಿ, ಸಾರಂಗಪಾಣಿ, ಪಟ್ಟಲದಮ್ಮನ, ಕೋಟೆ ಆಂಜನೇಯಸ್ವಾಮಿ, ಹೊರವಲಯದ ಶಕ್ತಿ ದೇವತೆ ದಂಡಿನ ಮಾರಮ್ಮನ, ಪುರಾತನ ಮಾರೇಹಳ್ಳಿಯ ಲಕ್ಷ್ಮಿನರಸಿಂಹಸ್ವಾಮಿ ಹಾಗೂ ತಾಲೂಕಿನ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ಬಹುತೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಜನರು ಸರದಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.

ಜಾನುವಾರುಗಳನ್ನು ಬೆಂಕಿಯ ಮೂಲಕ ಹಾಯಿಸುವ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗ್ರಾಮೀಣ ಪ್ರದೇಶದಲ್ಲಿನ ಹಬ್ಬವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ತೊಟ್ಟು ಮನೆ ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ, ಕೊಬ್ಬರಿ, ಕಬ್ಬು ನೀಡಿ ಆಚರಣೆ ಮಾಡಿದರು.

ರೈತರು ತಮ್ಮ ರಾಸುಗಳ ಕೊಂಬುಗಳಿಗೆ ವಿವಿಧ ಬಗೆಯ ಬಣ್ಣ ಬಳಿದು ಹೂವು ಮತ್ತು ಬಲೂನ್ ಸೇರಿದಂತೆ ಹಲವು ರೀತಿಯ ಅಲಂಕಾರಿಕ ವಸ್ತುಗಳಿಂದ ಶೃಂಗಾರ ಮಾಡಿ ಸೂರ್ಯ ಮುಳುಗುವ ವೇಳೆ ಸಂಪ್ರದಾಯದಂತೆ ಸಂಕ್ರಮಣನಿಗೆ ಪೂಜೆ ಸಲ್ಲಿಸಿ ನಂತರ ‘ಪೊಂಗಲ್’ ಎರಚಿ ರಾಸುಗಳನ್ನು ರೈತರು ಬೆಂಕಿಯಲ್ಲಿ ಕಿಚಾಯಿಸಿದರು.

ಪಟ್ಟಣದ ಪೇಟೆ ಒಕ್ಕಲಗೇರಿಯ ಟೋಲ್ ಗೇಟ್, ಕನಕಪುರ ರಸ್ತೆ, ಸುಲ್ತಾನ್ ರಸ್ತೆ, ಕೊಳ್ಳೇಗಾಲ ರಸ್ತೆ, ಮೈಸೂರು ರಸ್ತೆ ಸೇರಿದಂತೆ ವಿವಿಧೆಡೆ ಹಾಗೂ ತಾಲ್ಲೂಕಿನ ಎಲ್ಲ ಗ್ರಾಮಗಳ ಪ್ರಮುಖ ರಸ್ತೆಗಳಲ್ಲಿ ರೈತರು ತಮ್ಮ ರಾಸುಗಳನ್ನು ಕಿಚ್ಚು ಹಾಯಿಸುವ ಮೂಲಕ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ಹಲವೆಡೆ ಖಾಸಗಿ ವಾಹಿನಿ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ತಾಲೂಕಿನ ಗಿಲ್ಲಿ ನಟ ಗೆಲುವು ಸಾಧಿಸಲಿ ಎಂದು ಭಾವಚಿತ್ರ ಹಿಡಿದು ರಾಸುಗಳೊಂದಿಗೆ ಪೋಟೋ ತೆಗೆಸಿಕೊಂಡರು. ಪಟ್ಟಣದ ಪೇಟೆ ಬೀದಿಯಲ್ಲಿ ಸಚಿನ್ ಎಂಬ ಯುವ ರೈತ ತಮ್ಮ ರಾಸುಗಳಿಗೆ ಚೆರಿ ಹಣ್ಣಿನ ಹಾರ ಹಾಕಿ ಜನರ ಗಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್‌ಸಿಯು ಧೂಳಿಗೆ ಕಮರಿದ ರೈತರ ಬದುಕು
ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಅಗತ್ಯ