ಪೊಲೀಸ್ ವಶದಲ್ಲಿ ವ್ಯಕ್ತಿ ಸಾವು: ಠಾಣೆ ಬಳಿ ಶ‍ವವಿಟ್ಟು ಪ್ರತಿಭಟನೆ

KannadaprabhaNewsNetwork |  
Published : May 25, 2024, 12:57 AM IST
ಫೋಟೋಗಳು.. | Kannada Prabha

ಸಾರಾಂಶ

ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೊಂದು ಲಾಕಪ್ ಡೆತ್ ಆಗಿದೆಯೆಂದು ಆರೋಪಿಸಿ ಮೃತನ ಕುಟುಂಬ ವರ್ಗ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಠಾಣೆ ಮುಂದೆ ಶವವಿಟ್ಟು ಪ್ರತಿಭಟಿಸುತ್ತಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ವರದಿಯಾಗಿದೆ.

- ಚನ್ನಗಿರಿ ಠಾಣೆ ಎದುರು ರಾತ್ರೋರಾತ್ರಿ ಜಮಾಯಿಸಿದ ಜನ । ಜೂಜಾಟ ಶಂಕೆ ಮೇಲೆ ಕರೆತರಲಾಗಿದ್ದ ವ್ಯಕ್ತಿ

- ಪೊಲೀಸ್‌ ವಶದಲ್ಲಿದ್ದ ಆದಿಲ್‌ನನ್ನು ಪೊಲೀಸರೇ ಹೊಡೆದು ಕೊಂದಿದ್ದಾರೆಂದು ಸಂಬಂಧಿಗಳ ತೀವ್ರ ಆಕ್ರೋಶ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೊಂದು ಲಾಕಪ್ ಡೆತ್ ಆಗಿದೆಯೆಂದು ಆರೋಪಿಸಿ ಮೃತನ ಕುಟುಂಬ ವರ್ಗ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಠಾಣೆ ಮುಂದೆ ಶವವಿಟ್ಟು ಪ್ರತಿಭಟಿಸುತ್ತಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ವರದಿಯಾಗಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರದ ವಾಸಿಯಾದ ಬಡಿಗೆ ಕೆಲಸಗಾರ ಆದಿಲ್(32 ವರ್ಷ) ಮೃತ ವ್ಯಕ್ತಿ. ಮಟ್ಕಾ ಚೀಟಿ ಬರೆಯುತ್ತಿದ್ದ ಶಂಕೆಯಿಂದ ಪೊಲೀಸರು ಆದಿಲ್‌ಗೆ ಮಧ್ಯಾಹ್ನ ಠಾಣೆಗೆ ಕರೆ ತಂದು, ವಿಚಾರಣೆಗೊಳಪಡಿಸಿದ್ದರು. ಸಮೀಪದಲ್ಲಿಯೇ ನ್ಯಾಯಾಲಯ ಇದ್ದುದರಿಂದ ಸಂಜೆ ಒಳಗಾಗಿ ವಶದಲ್ಲಿದ್ದ ಆದಿಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲು ಪೊಲೀಸರು ಮುಂದಾಗಿದ್ದರು ಎನ್ನಲಾಗಿದೆ. ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ಹಂತದಲ್ಲಿ ಲಾಕಪ್‌ನಲ್ಲಿದ್ದ ಆದಿಲ್‌ ಕುಸಿದು ಬಿದ್ದಿದ್ದಾನೆ. ತಕ್ಷಣ‍ವೇ ಪೊಲೀಸರು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದಾಗ ಆದಿಲ್ ಸಾವನ್ನಪ್ಪಿದ್ದು, ವೈದ್ಯರು ಸಾವು ದೃಢಪಡಿಸಿದ್ದಾರೆ.

ಅತ್ತ ಆದಿಲ್‌ನ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಕುಟುಂಬ ಸದಸ್ಯರು ಆದಿಲ್ ಸಾವನ್ನಪ್ಪಿದ ಸುದ್ದಿ ತಿಳಿದು ಆಸ್ಪತ್ರೆ ಬಳಿ ದೌಡಾಯಿಸಿದ್ದಾರೆ. ಪೊಲೀಸ್ ವಶದಲ್ಲಿದ್ದ ಬಡಿಗೆ ಕೆಲಸಗಾರ ಆದಿಲ್ ಸಾವನ್ನಪ್ಪಿದ್ದಾನೆಂಬ ವಿಚಾರ ಒಬ್ಬರಿಂದ ಒಬ್ಬರಿಗೆ, ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿ, ಸುಮಾರು 500ಕ್ಕೂ ಹೆಚ್ಚು ಜನರು ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು.

ಆದಿಲ್‌ ಸಾವು; ಆಕ್ರೋಶ:

ಬಡಿಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಆದಿಲ್‌ನನ್ನು ಮಟ್ಕಾ ಕೇಸ್‌ ವಿಚಾರಣೆಗೆಂದು ಠಾಣೆಗೆ ಕರೆದೊಯ್ದು, ಅಮಾನುಷವಾಗಿ, ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರಿಂದ ಆತ ಸಾವನ್ನಪ್ಪಿದ್ದಾನೆ. ಇದು ಸಹಜವಾದ ಸಾವಲ್ಲ. ಪೊಲೀಸ್‌ ವಶದಲ್ಲಿದ್ದಾಗ ಪೊಲೀಸ್ ಠಾಣೆಯಲ್ಲೇ ಆದಿಲ್ ಸಾವನ್ನಪ್ಪಿದ್ದಾನೆ. ಆದರೆ, ಪೊಲೀಸರು ಅದನ್ನೆಲ್ಲಾ ಮರೆಮಾಚಲು ಚನ್ನಗಿರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂಬುದಾಗಿ ಠಾಣೆ ಬಳಿ ಜಮಾಯಿಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಪಿ-ಐಜಿಪಿ ಸ್ಥಳಕ್ಕೆ ಆಗಮಿಸಲು ಒತ್ತಾಯ:

ಠಾಣೆ ಮುಂದೆ ನೂರಾರು ಜನರು ಮೃತ ಆದಿಲ್‌ ಶವದ ಸಮೇತ ಪ್ರತಿಭಟಿಸುತ್ತಿದ್ದ ವಿಚಾರ ಗೊತ್ತಾಗುತ್ತಿದ್ದಂತೆ ಮತ್ತಷ್ಟು ಜನರು ಠಾಣೆ ಬಳಿ ಜಮಾಯಿಸಿದ್ದಾರೆ. ಇಡೀ ಠಾಣೆಯಲ್ಲಿ ಯಾವೊಬ್ಬ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಹ ಠಾಣೆಯಲ್ಲಿ ಇರಲಿಲ್ಲ. ಕೆಲವರಂತೂ ಠಾಣೆ ಬಾಗಿಲನ್ನು ಹಾಕಿ, ಠಾಣೆ ಮುಂದೆ ಪ್ರತಿಭಟಿಸುವ ಜೊತೆಗೆ ಆದಿಲ್ ಸಾವಿಗೆ ಕಾರಣರಾದ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎಸ್‌ಪಿ, ಐಜಿಪಿ ಸ್ಥಳಕ್ಕೆ ಧಾವಿಸಬೇಕು ಎಂಬುದಾಗಿ ಪಟ್ಟುಹಿಡಿದರು.

- - -

ಬಾಕ್ಸ್‌ಸ್ಥಳ ಬಿಟ್ಟು ಕದಲುವುದಿಲ್ಲ ಎಂದ ಪ್ರತಿಭಟನಾಕಾರರು ತಡರಾತ್ರಿವರೆಗೂ ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಆದಿಲ್ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಯಿತು. ಠಾಣೆಯಲ್ಲಿ ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಸಹ ಇರಲಿಲ್ಲ ಎನ್ನಲಾಗಿದೆ. ಪೊಲೀಸರೇ ಠಾಣೆಗೆ ಬೀಗ ಹಾಕಿ ಹೋಗಿದ್ದಾರೆ. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯ ಕೊಡಿಸುವವರೆಗೂ ನಾವು ಸ್ಥಳ ಬಿಟ್ಟು ಕದಲುವುದಿಲ್ಲ. ಬಡಗಿ ಕೆಲಸ ಮಾಡಿಕೊಂಡು, ಹೆಂಡತಿ, ಮಕ್ಕಳು, ಕುಟುಂಬ ಸಾಕುತ್ತಿದ್ದ ಆದಿಲ್‌ನನ್ನು ಪೊಲೀಸರೇ ಕೊಂದಿದ್ದಾರೆ. ಈಗ ಆದಿಲ್‌ನ ಕುಟುಂಬಕ್ಕೆ ಯಾರು ದಿಕ್ಕು ಎಂಬುದಾಗಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ಬಿಗುವಿನ ಪರಿಸ್ಥಿತಿ ಮುಂದುವರಿದಿತ್ತು.

- - - -ಡಿವಿಜಿ1:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ