ಅಧ್ಯಾತ್ಮ ಅರಿತು ಬಾಳುವುದರಲ್ಲಿ ಮನುಷ್ಯನ ಶ್ರೇಯಸ್ಸಿದೆ

KannadaprabhaNewsNetwork |  
Published : Sep 30, 2025, 02:00 AM IST
ಚಿತ್ರ 29ಬಿಡಿಆರ್50 | Kannada Prabha

ಸಾರಾಂಶ

ಮುಳ್ಳಿನ ನಡುವೆ ಗುಲಾಬಿ ಅರಳಿ ಸುಗಂಧ ಬೀರುವ ಹಾಗೆ ಕಷ್ಟಗಳ ನಡುವೆ ಬಾಳಿ ಬದುಕಬೇಕಾದರೆ ಮನುಷ್ಯನಿಗೆ ಆಧ್ಯಾತ್ಮ ಜ್ಞಾನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನುಡಿದರು.

ಬಸವಕಲ್ಯಾಣ: ಮುಳ್ಳಿನ ನಡುವೆ ಗುಲಾಬಿ ಅರಳಿ ಸುಗಂಧ ಬೀರುವ ಹಾಗೆ ಕಷ್ಟಗಳ ನಡುವೆ ಬಾಳಿ ಬದುಕಬೇಕಾದರೆ ಮನುಷ್ಯನಿಗೆ ಆಧ್ಯಾತ್ಮ ಜ್ಞಾನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನುಡಿದರು.

ಭಾನುವಾರ ರಾತ್ರಿ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ದಸರಾ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ 7ನೇ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಹೊನ್ನು, ಹೆಣ್ಣು, ಮಣ್ಣಿಗಾಗಿ ಬಡಿದಾಡುವ ಮನುಷ್ಯ ಒಂದಿಷ್ಟಾದರೂ ಆಧ್ಯಾತ್ಮ ಜ್ಞಾನ ಅರಿತು ಬಾಳುವುದರಲ್ಲಿ ಶ್ರೇಯಸ್ಸಿದೆ. ಮಾನವ ಧರ್ಮಕ್ಕೆ ಜಯವಾಗಲಿ ಎಂಬ ರಂಭಾಪುರಿ ಜಗದ್ಗುರುಗಳ ವಿಶ್ವಬಂಧುತ್ವದ ಸಂದೇಶ ಸಾಮರಸ್ಯ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದರು.

ಕೇಂದ್ರ ರಾಜ್ಯ ರೇಲ್ವೆ ಸಚಿವರಾದ ವಿ.ಸೋಮಣ್ಣ ಮಾತನಾಡಿ, ಸುಂದರವಾದ ಉಡುಗೆ ತೊಡುಗೆಗಳಿಂದ ವ್ಯಕ್ತಿತ್ವ ಬದಲಿಸಿಕೊಳ್ಳಬಹುದೇ ಹೊರತು ಬದುಕು ಬದಲಿಸಿಕೊಳ್ಳಲು ಸಾಧ್ಯವಿಲ್ಲ. ಸಂಸ್ಕಾರ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳಲು ಸಾಧ್ಯ. ಹೃದಯವಂತಿಕೆ ಇಲ್ಲದೇ ಬುದ್ಧಿವಂತಿಕೆ ಎಷ್ಟೇ ಇದ್ದರೂ ಪ್ರಯೋಜನವಿಲ್ಲ. ಬುದ್ಧಿಗಿಂತ ಹೃದಯವಂತಿಕೆ ಬಹು ಮುಖ್ಯ. ರಂಭಾಪುರಿ ಜಗದ್ಗುರುಗಳ ಆದರ್ಶ ಗುರಿ ಮತ್ತು ಬೋಧನೆ ನಮ್ಮೆಲ್ಲರ ಬಾಳಿಗೆ ಬೆಳಕು ತೋರುತ್ತವೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಮಾತನಾಡಿ, ವೀರಶೈವ ಲಿಂಗಾಯತ ಧರ್ಮ ವಿಶಿಷ್ಠವಾದದ್ದು, ಅಷ್ಟಾವರಣ ಪಂಚಾಚಾರ ಷಟಸ್ಥಲಗಳ ಮಾಹಿತಿಯನ್ನು ನಮ್ಮ ಮಕ್ಕಳಿಗೆ ತಿಳಿಸಬೇಕು. ಧರ್ಮದ ತಿಳುವಳಿಕೆಯನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕಾಗಿದೆ ಎಂದರು.

ಪ್ರಖ್ಯಾತ ಸಾಹಿತ್ಯ ಸಂಶೋಧಕರಾದ ಡಾ.ಎ.ಸಿ.ವಾಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪಡಸಾವಳಿ ಹಿರೇಮಠದ ಮತ್ತು ಉದ್ಗಿರ ಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮಿಗಳಿಗೆ ‘ವೀರಶೈವ ತತ್ವ ಪ್ರಬೋದಕ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಾರಕೂಡದ ಡಾ.ಚನ್ನವೀರ ಶಿವಾಚಾರ್ಯರು, ಗೌಡಗಾಂವ ಹಿರೇಮಠದ ಡಾ.ಜಯಸಿದ್ಧೇಶ್ವರ ಶಿವಾಚಾರ್ಯರು, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಎಮ್.ಎಲ್.ಸಿ. ಶಶೀಲ ನಮೋಶಿ, ಶಾಸಕ ಡಾ.ಸಿದ್ಧಲಿಂಗ ಪಾಟೀಲ, ಮಾಜಿ ಸಂಸದ ಉಮೇಶ ಜಾಧವ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ್‌ ಕಲ್ಲೂರ ಅಲ್ಲದೇ ವಿವಿಧ ಮಠದ ಮಠಾಧೀಶರು. ಗಣ್ಯರು ಭಾಗವಹಿಸಿದರು.

‘ಧರ್ಮಾಚರಣೆ ಇಲ್ಲದ ಮನುಷ್ಯನ

ವ್ಯಕ್ತಿತ್ವಕ್ಕೆ ಬೆಲೆ ನೆಲೆ ಸಿಗಲಾರದು’

ಸಾನ್ನಿಧ್ಯ ವಹಿಸಿದ ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಮಾತನಾಡಿ, ಧರ್ಮಾಚರಣೆ ಇಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ ನೆಲೆ ಸಿಗಲಾರದು. ಧರ್ಮ ಮತ್ತು ಧರ್ಮಾಚರಣೆ ಮರೆತರೆ ಅಪಾಯ ತಪ್ಪಿದ್ದಲ್ಲ ಎಂದರಲ್ಲದೆ, ಭೌತಿಕ ಜೀವನದ ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದಾಗಿದೆ ಎಂದರು. ಮನುಷ್ಯ ಭೂತ ಮತ್ತು ಭವಿಷ್ಯತ್ತಿನ ಬಗ್ಗೆ ಯೋಚಿಸುತ್ತಾನೆ. ಆದರೆ ವರ್ತಮಾನದ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಭೂಮಿಯ ವ್ಯಾಸ ಇದ್ದಷ್ಟೇ ಇದೆ. ಆದರೆ ಮನುಷ್ಯನ ಹವ್ಯಾಸಗಳು ಮಾತ್ರ ಬೆಳೆಯುತ್ತಲೇ ಇವೆ. ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬಂಧಗಳು ಸಡಿಲಗೊಳ್ಳಬಾರದು ಎಂದು ಕಿವಿಮಾತು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ