ಮಹಿಳಾ ಹಾಸ್ಟೆಲ್‌ಗೆ ಕಾವಲುಗಾರರ ನೇಮಕ ಕಡ್ಡಾಯ: ಸಿಇಒ

KannadaprabhaNewsNetwork | Published : May 28, 2024 1:04 AM

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಹಾಸ್ಟೆಲ್ ಮೇಲ್ವಿಚಾರಣ ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಮಾತನಾಡಿ, ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಜಿಲ್ಲೆಯಲ್ಲಿನ ಮಹಿಳಾ ವಸತಿ ವಿದ್ಯಾರ್ಥಿ ನಿಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರ ಜೊತೆಗೆ 24*7 ಕಾವಲುಗಾರರನ್ನು ನೇಮಿಸಬೇಕು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ವಸತಿ ನಿಲಯಗಳ ಮೂಲಭೂತ ಸೌಕರ್ಯಗಳು ಹಾಗೂ ವಿದ್ಯಾರ್ಥಿ ಗಳ ಶೈಕ್ಷಣಿಕ ಪ್ರಗತಿಯ ಜಿಲ್ಲಾಮಟ್ಟದ ವಸತಿ ನಿಲಯಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು ದುರಸ್ತಿ ಇದ್ದರೆ ಅದನ್ನು ಕೂಡಲೇ ಸರಿಪಡಿಸಿಕೊಂಡು ಚಾಲನೆಯಲ್ಲಿಟ್ಟಿರಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿರುವ ಎಲ್ಲಾ ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು, ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶುದ್ಧ ನೀರನ್ನು ಒದಗಿಸಬೇಕು. ವಸತಿ ನಿಲಯಗಳಲ್ಲಿರುವ ಶೌಚಾಲಯವು ಶುಚಿತ್ವದಿಂದ ಕೂಡಿರಬೇಕು.

ಆಹಾರದ ಮೆನು ಪ್ರಕಾರ ತಾಜಾ ತರಕಾರಿಗಳನ್ನು ಹಾಕಿ, ಉತ್ತಮ ಗುಣಮಟ್ಟದ ಆಹಾರವನ್ನು ಶುಚಿ ಮತ್ತು ರುಚಿಯಾಗಿ ಸಿದ್ಧಪಡಿಸಿ ಕೊಡಬೇಕು. ಆಹಾರ ತಯಾರಿಸುವಾಗ ಅಡುಗೆ ಮಾಡುವವರು ಸುರಕ್ಷಿತ ಉಡುಪುಗಳನ್ನು ಧರಿಸಿ ಆಹಾರ ತಯಾರಿಸಬೇಕು. ಶುಚಿ ಸಂಭ್ರಮದ ಬಗ್ಗೆ ವಾರ್ಡನ್‍ಗಳು ಖಾತ್ರಿ ಪಡಿಸಿಕೊಳ್ಳಬೇಕು. ದೂರು ಪೆಟ್ಟಿಗೆ ಹಾಗೂ ದೂರು ರಿಜಿಸ್ಟರ್‌ಗಳನ್ನು ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಇಟ್ಟಿರಬೇಕು ಹಾಗೂ ಅವುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು.

ಊಟದ ಸಮಯದಲ್ಲಿ ವಸತಿ ನಿಲಯದ ಮೇಲ್ವಿಚಾರಕರು ಕಡ್ಡಾಯವಾಗಿ ಹಾಜರಿದ್ದು, ಮೇಲ್ವಿಚಾರಣೆ ಮಾಡಬೇಕು. ಪ್ರೌಢ ಮತ್ತು ಪದವಿ ಪೂರ್ವ ಶಾಲೆ ಮತ್ತು ಕಾಲೇಜು ಗಳಿಗೆ ವಾರ್ಡನ್‍ಗಳು ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪಡೆದುಕೊಂಡು ಪೋಷಕರ ಸಭೆಗಳನ್ನು ಕಾಲಕಾಲಕ್ಕೆ ಕರೆದು ವರದಿ ನೀಡಬೇಕು. ಮೂಲಭೂತ ಸೌಕರ್ಯಗಳ ಬಗ್ಗೆ ಮೇಲ್ವಿಚಾರಕರು ಹೆಚ್ಚಿನ ಗಮನವಿರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳ ಕುಂದು-ಕೊರತೆಗಳ ಸಭೆ ಮಾಡಬೇಕು ಎಂದು ನಿರ್ದೇಶನ ನೀಡಿದರು. .

ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ವಸತಿ ನಿಲಯಗಳ ಮತ್ತು ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಿ ವರದಿ ನೀಡ ಬೇಕು. ವಸತಿ ನಿಲಯಗಳು ಜಿಲ್ಲೆಯಲ್ಲಿ ಮಾದರಿಯಾಗಲು ಶ್ರಮಪಟ್ಟು ಕೆಲಸ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯ್ಕ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್ ಇದ್ದರು.