ಮಂಡ್ಯದಲ್ಲಿ ಕಾಂಗ್ರೆಸ್, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.
ಮಂಡ್ಯ: ಸುಮಲತಾ ಅಂಬರೀಶ್ ಅವರ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಎಚ್ಚೆತ್ತ ಕಾಂಗ್ರೆಸ್, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.
ರಾಹುಲ್ ಅವರು ಏ.16ರಂದು ಮಂಡ್ಯದ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರ ಪರ ಪ್ರಚಾರ ನಡೆಸಲಿದ್ದಾರೆ. ನಟಿ ರಮ್ಯಾ ಕೂಡ ಪ್ರಚಾರಕ್ಕೆ ಆಗಮಿಸುತ್ತಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.
ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್-ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿರುವುದರಿಂದ ಕ್ಷೇತ್ರ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು, ಗೆಲ್ಲಲು ಅಗತ್ಯವಿರುವ ಎಲ್ಲಾ ತಂತ್ರಗಳನ್ನು ಬಳಸುತ್ತಿದೆ. ಏ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕೂಡ ಆಗಮಿಸಿ, ಪಕ್ಷದ ಪರ ಬಹಿರಂಗ ಪ್ರಚಾರ ನಡೆಸಲಿದ್ದಾರೆ.