ಮಂಗಳಗಂಗೋತ್ರಿ: ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್‌ಗೆ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ

KannadaprabhaNewsNetwork |  
Published : Jul 07, 2025, 11:48 PM ISTUpdated : Jul 08, 2025, 04:39 PM IST
ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಮಂಗಳೂರು ವಿ.ವಿ.ಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭ | Kannada Prabha

ಸಾರಾಂಶ

ತೆಂಕು ತಿಟ್ಟಿನ ಖ್ಯಾತ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಸೋಮವಾರ ಮಂಗಳೂರು ವಿ.ವಿ.ಯಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಮಾಡಲಾಯಿತು.

 ಉಳ್ಳಾಲ :   ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ವತಿಯಿಂದ ಇತ್ತೀಚೆಗೆ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಾರೋಗ್ಯದ ಕಾರಣದಿಂದ ಗೈರು ಹಾಜರಾಗಿದ್ದ ತೆಂಕು ತಿಟ್ಟಿನ ಖ್ಯಾತ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಸೋಮವಾರ ಮಂಗಳೂರು ವಿ.ವಿ.ಯಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನಾ ಭಾಷಣ ಮಾಡಿದ ಜಾನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಅವರು, ಸದಾಶಿವ ಶೆಟ್ಟಿಗಾರ್ ಬಣ್ಣದ ಮಾಲಿಂಗರ ಶಿಷ್ಯರಾಗಿ ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಓರ್ವ ಪರಂಪರೆಯ ಸಮರ್ಥ ಹಿರಿಯ ಕಲಾವಿದರಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 42 ವರ್ಷ ಸುದೀರ್ಘವಾಗಿ ದುಡಿದು ಕಲಾಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು, ಮಂಗಳೂರು ವಿ.ವಿ.ಯ ಯಕ್ಷಗಾನ ಅಧ್ಯಯನ ಕೇಂದ್ರವು ಹಿರಿಯ ಯಕ್ಷಗಾನ ಕಲಾವಿದರ ಅನುಭವ ಕಥನದ ದಾಖಲೀಕರಣದೊಂದಿಗೆ ಮಹತ್ವದ ಕಾರ್ಯ ಮಾಡುತ್ತಿದೆ. ಹಿರಿಯ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿವೆ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದಾಶಿವ ಶೆಟ್ಟಿಗಾರ್ ಅವರು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಾಗಿಲ್ಲ ಎಂಬ ಕೊರಗು ಕಾಡುತ್ತಿತ್ತು. ಇದೀಗ ಇಂದು ಆ ಕನಸು ನನಸಾಗಿದೆ. ಅರ್ಜಿ ಹಾಕದೇ ಗುರುತಿಸಿದ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿ ಧನ್ಯನಾಗಿದ್ದೇನೆ ಎಂದರು.ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಕುಲಸಚಿವ ಕೆ.ರಾಜು ಮೊಗವೀರ, ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ, ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.ನಾಗಪ್ಪ ಗೌಡ, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಧನಂಜಯ ಕುಂಬ್ಳೆ, ಕಾರ್ಯಾಕಾರಿ ಅಭಿಯಂತರರಾದ ಲವ ಮಹಾದೇವಪ್ಪ, ವಿ.ವಿ.ಯ ಉಪ ಕುಲಸಚಿವರಾದ ರೋಶನಿ,‌ ಲಲಿತಾ, ಕುಲಪತಿಗಳ ಆಪ್ತ ಸಹಾಯಕಿ ಲತಾ, ಸಹಾಯಕ ಗೌತಂ, ಕೇಂದ್ರದ ಸಂಶೋಧನಾಧಿಕಾರಿ ಡಾ.ಸತೀಶ್ ಕೊಣಾಜೆ, ಸಿಬ್ಬಂದಿ ಸ್ವಾತಿ, ವಿವಿಧ ಪೀಠಗಳ ಸಂಶೋಧನ ಸಹಾಯಕರು, ಸಿಬ್ಬಂದಿ ಭಾಗವಹಿಸಿದ್ದರು.

PREV
Read more Articles on