ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಭಾನುವಾರ ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳ ಪ್ರೌಢಿಮೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಉತ್ತಮ ಅಡಿಪಾಯ ನಿರ್ಮಿಸುತ್ತಿವೆ. ಕೀರ್ತಿ ಶೇಷರಾದ ವಿಜಯರಾಘವ ಪಡುವೆಟ್ನಾಯ, ಪ್ರೊ. ಎಸ್. ಪ್ರಭಾಕರ್, ಡಾ. ಯಶೋವರ್ಮ ಮಾರ್ಗದರ್ಶನದಲ್ಲಿ ಬೆಳೆದಿರುವ ಉಜಿರೆ ಸಾಂಸ್ಕೃತಿಕ ವಿಚಾರಗಳಿಗೆ ಸದಾ ಬೆನ್ನೆಲುಬಾಗಿದೆ ಎಂದರು.
ಉದ್ಯಮಿ ಶಶಿಧರ ಶೆಟ್ಟಿ ಬರೋಡ ಮಾತನಾಡಿ, ಬೆಳ್ತಂಗಡಿ ಘಟಕದಿಂದ ವರ್ಷಕ್ಕೆ ಕನಿಷ್ಠ ಎರಡು ಕಾರ್ಯಕ್ರಮ ನಡೆಸುವ ಯೋಜನೆ ರೂಪಿಸಲಾಗಿದೆ ಎಂದರು.ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಶುಭ ಹಾರೈಸಿದರು.
3 ಗಂಟೆ ಕಾಲ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯ ಕಲಾಸಕ್ತರು ಭಾಗವಹಿಸಿದ್ದರು.
ಜಾಗತಿಕವಾಗಿ 17 ನುಡಿಸಿರಿ, 30 ವಿರಾಸತ್ ಕಾರ್ಯಕ್ರಮಗಳು ಮೂಡಿಬಂದಿವೆ. 88 ಘಟಕಗಳು ದೇಶ-ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ನಮ್ಮದು ಸಂಸ್ಕೃತಿ ಬೆಳೆಸುವ ಉದ್ದೇಶವೇ ಹೊರತು ಸ್ಪರ್ಧೆಯಲ್ಲ. ಕಲೆಯ ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ಹೊಸ ರೂಪಗಳು ಮೂಡಿ ಬರಬೇಕು.-ಡಾ. ಎಂ. ಮೋಹನ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು