ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ಗೌರವ

KannadaprabhaNewsNetwork |  
Published : Jul 23, 2026, 02:45 AM IST
ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸರನ್ನು ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಗೌರವಿಸಿದರು | Kannada Prabha

ಸಾರಾಂಶ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆ ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ ಗೌರವಿಸಲಾಯಿತು.

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆ ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ ಗೌರವಿಸಲಾಯಿತು.

ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ ಅವರು 29 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 118 ಸಿಬ್ಬಂದಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಕಳೆದ ಆರು ತಿಂಗಳ ಅವಧಿಯಲ್ಲಿ 24 ಎಲ್.ಪಿ.ಸಿ. ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್.ಬಿ.ಡಬ್ಲ್ಯು. ವಾರಂಟ್ ಹೊಂದಿದ್ದ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಲಾಗಿದೆ. 2026ನೇ ಸಾಲಿನಲ್ಲಿ ಸೊತ್ತು ಕಳವು ಪ್ರಕರಣಗಳ ಪೈಕಿ 88 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿ, ಸುಮಾರು 1.20 ಕೋಟಿ ರು. ಮೌಲ್ಯದ ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಪೆಡ್ಲರ್‌ಗಳ ವಿರುದ್ಧ 84 ಪ್ರಕರಣಗಳನ್ನು ದಾಖಲಿಸಿ, 142 ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 346 ಪ್ರಕರಣ ದಾಖಲಿಸಿ, 443 ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಪೆಡ್ಲರ್‌ಗಳ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಸೈಬರ್ ಅಪರಾಧಗಳು ನಡೆಯದಂತೆ ಕಾಲಕಾಲಕ್ಕೆ ನಗರ ವ್ಯಾಪ್ತಿಯಲ್ಲಿ ಜಾಗೃತಿ ಹಾಗೂ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಮಿಷನರ್‌ ತಿಳಿಸಿದರು.

ಸೈಬರ್‌ ವಂಚನೆಗೊಳಗಾದ ಹಣವನ್ನು ಮರುಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳನ್ನು, ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದ್ದ ಅಧಿಕಾರಿ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ಪ್ರಮುಖ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಾಗಿ, ತನಿಖಾ ಸಹಾಯಕರಾಗಿ ಹಾಗೂ ನ್ಯಾಯಾಲಯದ ಕರ್ತವ್ಯಗಳಲ್ಲಿ ಉತ್ತಮ ಸೇವೆ ಸಲ್ಲಿಸಿ, ಗುಣಮಟ್ಟದ ತನಿಖೆ ನಡೆಸುವ ಮೂಲಕ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಶ್ರಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ಗೌರವಿಸಲಾಯಿತು.112 ತುರ್ತು ಸ್ಪಂದನೆ ಸಹಾಯವಾಣಿಯ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ನಗರದ ನಿಸ್ತಂತು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬಿಕಾ ನೀಟ್‌ ಅಕಾಡೆಮಿ: ರಿಪೀಟರ್ಸ್‌ ಬ್ಯಾಚ್ ದಾಖಲಾತಿ ಆರಂಭ
ಕೆಬಿಎಲ್‌ ಹೆಚ್ಚುವರಿ ನಿರ್ದೇಶಕರಾಗಿ ಡಾ.ಎಂ.ಅರುಣ ಶ್ಯಾಮ್‌ ನೇಮಕ