ಗಂಡು- ಹೆಣ್ಣಿನ ನಡುವೆ ಭೇದ ಭಾವನೆ ಬೇಡ: ಡಾ.ಶಿವಪ್ರಕಾಶ್

KannadaprabhaNewsNetwork |  
Published : Mar 21, 2026, 02:30 AM IST
ಕಾರ್ಯಾಗಾರ ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ- 1994 ಕುರಿತು ಕಾರ್ಯಾಗಾರ

ಮಂಗಳೂರು: ಲಿಂಗಾನುಪಾತ ಹದಗೆಡಲು ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಮುಖ್ಯವಾಗಿ ಕಾರಣವಾಗುತ್ತಿದ್ದು, ಈ ಪಿಡುಗನ್ನು ಹೋಗಲಾಡಿಸಬೇಕು. ಸಮಾಜದಲ್ಲಿ ಗಂಡು ಶ್ರೇಷ್ಠ, ಹೆಣ್ಣು ತಾತ್ಸಾರ ಎಂಬ ಭೇದ ತೋರದೆ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ- 1994 ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹೆಣ್ಣು ಮಗು ಹುಟ್ಟಿದರೆ ಶಿಕ್ಷಣ, ವರದಕ್ಷಿಣೆ ಹಾಗೂ ವಿವಾಹ ವೆಚ್ಚ ಭರಿಸಬೇಕಾಗುತ್ತದೆ ಎಂಬ ಕಾರಣದಿಂದ ಕುಟುಂಬಕ್ಕೆ ಹೊರೆ ಎಂದು ಭಾವಿಸಿಕೊಂಡ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಹೆಣ್ಣಿನ ಮೇಲಿರುವ ತಾತ್ಸಾರ ಭಾವನೆಯನ್ನು ದೂರ ಮಾಡಬೇಕು ಎಂದು ಅವರು ಹೇಳಿದರು.

ಬಾಲ್ಯ ವಿವಾಹ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಿನಲ್ಲಿ ಹೆಣ್ಣು ಗರ್ಭಿಣಿಯಾಗಿ ಹೆರಿಗೆ ಸಂದರ್ಭದಲ್ಲಿ ಸಾವಿಗೀಡಾಗುವ ಸಾಧ್ಯತೆಗಳಿಂದ ಹಾಗೂ ಹೆಣ್ಣು ಮಕ್ಕಳಿಗಿರುವ ಕಡಿಮೆ ಸಾಮಾಜಿಕ ಸ್ಥಾನಮಾನ, ಗಂಡು ಮಗು ಬೇಕೆನ್ನುವ ಹಂಬಲ ಹಾಗೂ ಮೂಢನಂಬಿಕೆಗಳಿಂದ ವೈದ್ಯಕೀಯ ತಂತ್ರಜ್ಞಾನಗಳ ಮೂಲಕ ಭ್ರೂಣ ಲಿಂಗ ಪತ್ತೆ ಹಚ್ಚಿ ಹೆಣ್ಣು ಶಿಶುಗಳ ಹತ್ಯೆ ಮಾಡುವುದರಿಂದ ಮಹಿಳೆಯರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಡಾ.ಶಿವಪ್ರಕಾಶ್‌ ಕಳವಳ ವ್ಯಕ್ತಪಡಿಸಿದರು.ಮಹಿಳೆಯರ ಮತ್ತು ಪುರುಷರ ಅನುಪಾತದ ಅಸಮತೋಲನ ಸಾಮಾಜಿಕ ಪರಿಣಾಮಗಳನ್ನು ಉಂಟುಮಾಡುತ್ತದೆ. ಆದ್ದರಿಂದ ಬಾಲ್ಯವಿವಾಹ, ವರದಕ್ಷಿಣೆಯಂತಹ ಸಾಮಾಜಿಕ ಪಿಡುಗುಗಳಿಂದ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು. ಗಂಡು ಮಕ್ಕಳಿಗೆ ನೀಡುವಷ್ಟೇ ಸಮಾನ ಅವಕಾಶವನ್ನು ಹೆಣ್ಣು ಮಕ್ಕಳಿಗೂ ನೀಡಬೇಕು ಎಂದರು.

ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ:

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಮಾತನಾಡಿ, ಸ್ಕ್ಯಾನಿಂಗ್ ಸೆಂಟರ್‌ಗಳು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ವಯ ಕಾನೂನು, ಮಾರ್ಗಸೂಚಿ, ದಾಖಲಾತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾನೂನಿನ ಉಲ್ಲಂಘನೆಗೆ ಯಾವುದೇ ರಿಯಾಯಿತಿ ಇರುವುದಿಲ್ಲ. ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಉಲ್ಲಂಘನೆ ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಕ್ಷೇಮ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ.ರಘುರಾಜ್ ಅವರು ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯ ಕುರಿತು ಹಾಗೂ ಎ.ಜೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಅಮೃತಾ ಭಂಡಾರಿ ಅವರು ಎಂ.ಟಿ.ಪಿ (ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ) ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್ ಎ., ಐಆರ್‌ಐಎ ಅಧ್ಯಕ್ಷ ಡಾ.ಪ್ರವೀಣ್ ಜೆ.ಜಾನ್, ಐಎಂಎ ಅಧ್ಯಕ್ಷ ಡಾ.ಸದಾನಂದ ಪೂಜಾರಿ, ಎಫ್ಒಜಿಎಸ್ಐ ಅಧ್ಯಕ್ಷ ಡಾ.ಪ್ರದೀಪ್ ಗಾಣಿಗ ಮತ್ತಿತರರು ಇದ್ದರು.

ಜಿಲ್ಲಾ ಅನುಷ್ಠಾನ ಅಧಿಕಾರಿ ಡಾ.ದೀಪಾ ಪ್ರಭು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಹೀರಾತು ನೀತಿ-2026 ಸ್ಥಗಿತಕ್ಕೆ ಒತ್ತಾಯಿಸಿ ಮನವಿ
ಧಾರ್ಮಿಕ ತ್ಯಾಜ್ಯ ಸಂಗ್ರಹ, ವಿಲೇವಾರಿಗೆ ಅಭಿಯಾನ ಆರಂಭ