ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ, ಪರಮಾನಂದ ಸಾಲ್ಯಾನ್ ಪತ್ರಿಕಾ ರಂಗದ ಜತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದರು. ಭೂತಾರಾಧಾನೆ, ನಾಟಕ, ತುಳುನಾಡಿನ ಸಂಸ್ಕೃತಿಯ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದ ಅವರು ಕಿರಿಯ ಪತ್ರಕರ್ತರಿಗೆ ಕಲಿಸುವ ಮಾದರಿಯಂತೂ ವಿಶಿಷ್ಟವಾಗಿತ್ತು ಎಂದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಮಾಜಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ಭಾಸ್ಕರ ರೈ ಕಟ್ಟ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದದ್ಯ ಶ್ರೀನಿವಾಸ್ ನಾಯಕ್ ಇಂದಾಜೆ ನುಡಿನಮನ ಸಲ್ಲಿಸಿದರು. ಸಂಘದ ಪದಾಧಿಕಾರಿಗಳಾದ ವಿಲ್ಫ್ರೆಡ್ ಡಿಸೋಜ, ಸತೀಶ್ ಇರಾ, ರಾಜೇಶ್ ಶೆಟ್ಟಿ, ಜೀವನ್ ಬಿ.ಎಸ್., ರಾಜೇಶ್ ದಡ್ಡಂಗಡಿ ಮತ್ತಿತರರು ಇದ್ದರು.