ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯ ಸಂಯೋಜನೆಗೆ ಒಳಪಟ್ಟಿರುವ ಮೂರು ಪ್ರಮುಖ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಕೋರ್ಸ್ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಆನ್ಲೈನ್ ಮೂಲಕ ಸೋಮವಾರ ನಡೆದ ಮಂಗಳೂರು ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಾಣಿಜ್ಯ ಹಾಗೂ ಹೊಸ ತಂತ್ರಜ್ಞಾನ ಆಧಾರಿತ ಕೋರ್ಸ್ಗಳತ್ತ ವಿದ್ಯಾರ್ಥಿಗಳು ಹೆಚ್ಚಿನ ಒಲವು ವ್ಯಕ್ತಪಡಿಸಿರುವುದೇ ಈ ನಿರ್ಧಾರಕ್ಕೆ ಕಾರಣವಾಗಿದೆ.
ಯಾವ ಕಾಲೇಜುಗಳಲ್ಲಿ ಬಿಎ ಬಂದ್?:
ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರಸಕ್ತ ಸಾಲಿನಿಂದ ಮಂಗಳೂರಿನ ಕಾವೂರು ಸರ್ಕಾರಿ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ, ಸಮಾಜಶಾಸ್ತ್ರ ಹಾಗೂ ಇತಿಹಾಸ, ಪತ್ರಿಕೋದ್ಯಮ, ಕನ್ನಡ ಕಾಂಬಿನೇಷನ್ ಕೋರ್ಸ್ಗಳು ಬಂದ್ ಆಗಿದೆ. ಪುಂಜಾಲಕಟ್ಟೆ ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ, ಕನ್ನಡ ಮತ್ತು ಸಮಾಜಶಾಸ್ತ್ರ ಕಾಂಬಿನೇಷನ್ ರದ್ದು, ಉಡುಪಿ ಅಜ್ಜರಕಾಡಿನ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಇಂಗ್ಲಿಷ್, ಇತಿಹಾಸ ಮತ್ತು ರಾಜ್ಯಶಾಸ್ತ್ರ ಕಾಂಬಿನೇಷನ್ ಬಂದ್ ಆಗಿದೆ. ಈ ಸರ್ಕಾರಿ ಕಾಲೇಜುಗಳಲ್ಲಿ ಕಲಾ ವಿಭಾಗದ ನಿರ್ದಿಷ್ಟ ಕಾಂಬಿನೇಷನ್ಗಳನ್ನು ಮುಚ್ಚಲಾಗುತ್ತಿದೆ.ಜಗತ್ತಿನಾದ್ಯಂತ ಸಂಭವಿಸುತ್ತಿರುವ ಭೂಕಂಪ, ಭೂಕುಸಿತ, ಪ್ರವಾಹಗಳಂತಹ ನೈಸರ್ಗಿಕ ವಿಕೋಪಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿಪತ್ತು ನಿರ್ವಹಣೆ ಕೋರ್ಸ್ ಅನ್ನು ಓಪನ್ ಎಲೆಕ್ಟಿವ್ ಆಗಿ ಸೇರಿಸಲು ಹಾಗೂ ಜಾಗತಿಕ ಆಹಾರದ ಕೊರತೆ ನೀಗಿಸಲು ಕೃಷಿ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿಜ್ಞಾನ ವಿಭಾಗದ ಪಠ್ಯಕ್ರಮದಲ್ಲಿ ಆಹಾರ ಬಿಕ್ಕಟ್ಟು ಕುರಿತ ವಿಷಯಗಳನ್ನು ಸೇರಿಸಲು ವಿಭಾಗೀಯ ಮುಖ್ಯಸ್ಥರಿಗೆ ಕುಲಪತಿಗಳು ಸೂಚಿಸಿದರು.
-ಪ್ರೊ. ಪಿ. ಎಲ್. ಧರ್ಮ, ಕುಲಪತಿ, ಮಂಗಳೂರು ವಿವಿ