ಮಂಗಳೂರು: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಯೋಜನೆಯ ಭ್ರಾಮರೀ ಯಕ್ಷವೈಭವ 2026 ಕಾರ್ಯಕ್ರಮ ಆ.1ರಂದು ಸಂಜೆ 7 ಗಂಟೆಗೆ ನಡೆಯಲಿದೆ.
ತನ್ನ ಹದಿನೈದನೆಯ ವಯಸ್ಸಿನಲ್ಲಿ ಯಕ್ಷಗಾನ ರಂಗವನ್ನು ಪ್ರವೇಶ ಮಾಡಿದ ಕೆ.ಎಚ್.ದಾಸಪ್ಪ ರೈ ಅವರು ಆರು ದಶಕಗಳಿಂದಲೂ ಅಧಿಕ ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹಿರಿಯ ಕಲಾವಿದರು. ಕರ್ನಾಟಕ ಮೇಳ, ಕದ್ರಿ ಮೇಳ, ಕುಂಬಳೆ ಕಣಿಪುರ ಮೇಳ, ಮಂಗಳಾದೇವಿ ಮೇಳ ಸಹಿತ ದೇಶ ವಿದೇಶದಲ್ಲಿ ಪ್ರದರ್ಶನ ನೀಡಿದ ಹಿರಿಯ ಕಲಾವಿದರು. ಕೋಟಿ ಚೆನ್ನಯ ಯಕ್ಷಗಾನದ ಕೋಟಿ, ಕಾಡಮಲ್ಲಿಗೆ ಯಕ್ಷಗಾನದ ಮೈಂದ ಗುರಿಕಾರೆ ಪಾತ್ರದ ಮೂಲಕ ಯಕ್ಷಭಿಮಾನಿಗಳನ್ನು ಸೆಳೆದವರು. ಯಕ್ಷಗಾನ ಕಲಾವಿದ ಮಾತ್ರವಲ್ಲದೆ ಸ್ವತಃ ಮೇಳ ನಡೆಸಿ ಮೇಳದ ಯಜಮಾನರಾಗಿಯೂ ಗುರುತಿಸಿಕೊಂಡಿದ್ದರು.
ಯಕ್ಷಸೇವಾ ಪುರಸ್ಕಾರ:ಕಳೆದ ಮೂರು ದಶಕಗಳಿಂದ ಯಕ್ಷಗಾನದ ನೇಪಥ್ಯ ಕಲಾವಿದರಾಗಿ ಗುರುತಿಸಿಕೊಂಡಿರುವ ಮೋನಪ್ಪ ಗೌಡ ಹಾಗೂ ಕಳೆದ 90 ವರ್ಷಕ್ಕೂ ಅಧಿಕ ಕಾಲದಿಂದ ನಿರಂತರವಾಗಿ ಯಕ್ಷಗಾನ ತಾಳಮದ್ದಳೆ ಆಯೋಜಿಸಿಕೊಂಡು, ಯಕ್ಷಗಾನ ತರಬೇತಿ ನಡೆಸುತ್ತಿರುವ ಮುಡಿಪು ಕುರ್ನಾಡಿನ ಶ್ರೀ ದತ್ತಾತ್ತೇಯ ಯಕ್ಷಗಾನ ಮತ್ತು ಭಜನಾಮಂಡಳಿ ಸಂಸ್ಥೆಗೆ ಈ ಬಾರಿಯ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಭ್ರಾಮರೀ ಯಕ್ಷಸೇವಾ ಪುರಸ್ಕಾರ ತಲಾ ಆರು ಸಾವಿರ ರು. ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.