ಕನ್ನಡಪ್ರಭ ವಾರ್ತೆ ರಾಯಚೂರು
ಸಪ್ತರಾತ್ರೋತ್ಸವದ ಮೂರನೇ ದಿನವಾದ ಭಾನುವಾರ, ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಸಾನಿಧ್ಯದಲ್ಲಿ ಪ್ರಾತಃಕಾಲದಲ್ಲಿ ನೈರ್ಮಲ್ಯ ವಿಸರ್ಜನೆ, ಉತ್ಸವ ರಾಯರ ಪಾದಪೂಜೆ ಹಾಗೂ ಪಂಚಾಮೃತಾಭಿಷೇಕವನ್ನು ನಡೆಸಲಾಯಿತು. ಬೆಳಗ್ಗೆ ವೇದ-ಮಂತ್ರಗಳ ಪಾರಾಯಣ, ಬಳಿಕ ಬೆಂಗಳೂರಿನ ವಿದ್ವಾನ್ ಮದನೂರ ಪವಮನಾಚಾರ್ಯ ಅವರಿಂದ ಪ್ರವಚನಗಳು ನಡೆದವು.ಶ್ರೀರಂಗಂನಿಂದ ಬಂದ ಶೇಷವಸ್ತ್ರ:
ಪ್ರತಿವರ್ಷದಂತೆ ಗುರುರಾಯರ ಪೂರ್ವಾರಾಧನೆ ಅಂಗವಾಗಿ ತಮಿಳುನಾಡು ರಾಜ್ಯದ ತಿರಚಿಯ ಶ್ರೀರಂಗಂನ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಿಂದ ವಸ್ತ್ರರೂಪದಲ್ಲಿ ತರಲಾಗಿದ್ದ ಶೇಷವಸ್ತ್ರ ಪ್ರಸಾದವನ್ನು ಶ್ರೀಗಳು ಸ್ವಾಗತಿಸಿದರು. ಶೇಷವಸ್ತ್ರ ಪ್ರಸಾದವನ್ನು ಮೆರವಣಿಗೆಯಲ್ಲಿ ತಂದು, ಮೂಲಬೃಂದಾವನದ ಮುಂದಿರಿಸಿ, ಮಂಗಳಾರತಿ ಮಾಡಿ, ರಾಯರಿಗೆ ಸಮರ್ಪಿಸಿದರು. ನಂತರ, ಪ್ರಾಧಿಕಾರದ ವೇದಿಕೆಯಲ್ಲಿ ಭಕ್ತರನ್ನುದ್ದೇಶಿಸಿ ಅನುಗ್ರಹ ಸಂದೇಶ ನೀಡಿದರು.ಪ್ರತಿ ವರ್ಷ ರಾಯರ ಆರಾಧನಾ ಸಮಯದಲ್ಲಿ ಟಿಟಿಡಿ, ಶ್ರೀರಂಗ, ಅಹೋಬಿಲಂ ಹಾಗೂ ಕಾಂಚಿಪುರಂ ಕ್ಷೇತ್ರಗಳಿಂದ ಮಠಕ್ಕೆ ಬರುವ ವಸ್ತ್ರಪ್ರಸಾದವನ್ನು ಗುರುರಾಯರಿಗೆ ಸಮರ್ಪಿಸುವ ಸಂಪ್ರದಾಯ ಹಾಕಿಕೊಳ್ಳಲಾಗಿದೆ. ಈ ಮುಖಾಂತರ ಗುರುಗಳ ಹಾಗೂ ಭಗವಂತನ ಅನುಗ್ರಹ ಎಲ್ಲ ಭಕ್ತರಿಗೂ ದೊರೆಯಲಿ ಎಂದು ಶುಭಕೋರಿದರು.
ನಂತರ, ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದರು ಶ್ರೀಮೂಲ ರಘುಪತಿ ವೇದವ್ಯಾಸದೇವರಿಗೆ ಸಂಸ್ಥಾನ ಪೂಜೆ, ಅಲಂಕಾರ ಸಮರ್ಪಣ ಹಾಗೂ ಹಸ್ತೋದಕ, ಮಹಾಮಂಗಳಾರತಿ ನೆರವೇರಿಸಿದರು. ಪೂರ್ವಾರಾಧನೆ ನಿಮಿತ್ತ ವಿಶೇಷವಾಗಿ ಅಲಂಕಾರಗೊಂಡಿದ್ದ ರಾಯರ ಮೂಲಬೃಂದಾವನಕ್ಕೆ ಮಹಾಮಂಗಳಾರತಿ ಸೇವೆಗೈದರು. ಸಂಜೆ ಹಗಲು ದೀವಟಿಗೆ, ಮಲ್ಕಿ ಮಂಗಳಾರತಿ ಸೇವೆ, ಸ್ವಸ್ಥಿ ವಾಚನ ಮತ್ತು ಪ್ರಾಕಾರದಲ್ಲಿ ರಜತಸಿಂಹ ವಾಹನೋತ್ಸವಗಳು ಅದ್ದೂರಿಯಾಗಿ ಜರುಗಿದವು.
ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದಾಚಾರ್, ರಾಜ್ಯ ಸರ್ಕಾರದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಉಪಸ್ಥಿತರಿದ್ದರು.