ಪುತ್ತೂರು: ಮಕ್ಕಳು 40 ಶೇ.ದಷ್ಟು ಶಾಲೆಯಲ್ಲಿ ಕಲಿತರೆ 60 ಶೇ.ದಷ್ಟು ಮನೆಯಲ್ಲಿ ಕಲಿಯಲಿದ್ದು, ಹೀಗಾಗಿ ಪೋಷಕರು ಕೂಡ ಮಕ್ಕಳ ಶಿಕ್ಷಣದ ಕುರಿತು ಕಾಳಜಿ ವಹಿಸಬೇಕಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ಸೋಮವಾರ ಪುತ್ತೂರು ನಗರದ ಸಾಮೆತ್ತಡ್ಕ ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕಚೇರಿಯ ಸಹಯೋಗದಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ಗ್ರಾಮಕ್ಕೆ ಕೆಪಿಎಸ್ ಶಾಲೆಗಳನ್ನು ನೀಡುವ ಯೋಚನೆ ಸರ್ಕಾರದ ಮುಂದಿದ್ದು, ಅದರ ಮೂಲಕ ಮಕ್ಕಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣದ ಜತೆಗೆ ಶಾಲಾ ವಾಹನದಲ್ಲೇ ಕರೆದುಕೊಂಡು ಬರುವ ಯೋಚನೆ ಇರುತ್ತದೆ. ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಮುಂದಿನ 6 ತಿಂಗಳೊಳಗೆ ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದ್ದು, ಪ್ರಸ್ತುತ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೀಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಶೆಟ್ಟಿ, ಶಾಲಾ ಸ್ಥಾಪಕಾಧ್ಯಕ್ಷ ಸಾಮೆತಡ್ಕ ಗೋಪಾಲಕೃಷ್ಣ ಭಟ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮೋನಪ್ಪ ಎಂ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟೀಪನ್ ವೇಗಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸಿಲ್ವಿಯಾ ಅಸುಂತಾ ಕ್ಯಾಸ್ಟಲಿನೊ, ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ, ಸಿಆರ್ ಪಿ ಶಶಿಕಲಾ, ಪ್ರಮುಖರಾದ ದಿನೇಶ್ ಕಾಮತ್, ಮುಖ್ಯಶಿಕ್ಷಕಿ ಜಲಜಾಕ್ಷಿ ಉಪಸ್ಥಿತರಿದ್ದರು.ಶಿಕ್ಷಕಿ ಮರಿಯಾ ಕಾರ್ಯಕ್ರಮ ನಿರ್ವಹಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿಗಳನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.