ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಹುಲಿವಾನ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಕಾರ್ಯಕರ್ತರು ಮತ್ತು ಗ್ರಾಮಸ್ಥರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಜನತಾ ಕಾಲೋನಿ, ಚಾಮಲಾಪುರ, ಎಸ್ಐ. ಕೋಡಿಹಳ್ಳಿ, ಬೊಕ್ಕೇಗೌಡನದೊಡ್ಡಿ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನತೆ ಕಡು ಬಡವರಾಗಿದ್ದು, ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಮೈಕ್ರೋ ಪೈನಾನ್ಸ್ಗಳಲ್ಲಿ ಹಣ ಪಡೆದು ಜೀವನ ಸಾಗಿಸುತ್ತಿದ್ದಾರೆ. ಸಾಲ ಮಾಡಿಕೊಂಡು ತುಂಬಾ ಕಷ್ಟಪಡುತ್ತಿದ್ದು, ನಿವೇಶನ ಇಲ್ಲದೆ ಇರುವವರು ಹಾಗೂ ಒಂದೇ ಮನೆಯಲ್ಲಿ ಎರಡು ಮೂರು ಕುಟುಂಬಗಳು ವಾಸ ಮಾಡುತ್ತಿವೆ. ಸುಮಾರು ಐನೂರಕ್ಕೂ ಹೆಚ್ಚು ಕುಟುಂಬಗಳು ಈ ಪರಿಸ್ಥಿತಿಯನ್ನು ಎದುರಿಸುತ್ತಿವೆ ಎಂದು ದೂರಿದರು.ಗ್ರಾಮದ ಸರ್ವೇ ನಂ. ೪೪/ಪಿ೧೪ರಲ್ಲಿ ಸರ್ಕಾರ ಸುಮಾರು ೮.೦೯ ಎಕರೆ ನಿವೇಶನಕ್ಕಾಗಿ ಮಂಜೂರು ಮಾಡಿ ಹುಲಿವಾನ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದೆ. ಆದರೆ, ಗ್ರಾಮ ಪಂಚಾಯಿತಿಯವರು ನಿವೇಶನ ಹಂಚಿಕೆ ಮಾಡಿಲ್ಲ. ಅಲ್ಲದೆ, ಗ್ರಾಮದಲ್ಲಿ ಸ್ಮಶಾನ ಜಾಗವಿಲ್ಲ. ಸ್ಮಶಾನ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ತೆರವುಗೊಳಿಸಲು ನ್ಯಾಯಾಲಯ ಆದೇಶ ನೀಡಿದ್ದರೂ, ಅಧಿಕಾರಿಗಳು, ಪಟ್ಟಭದ್ರ ಹಿತಾಸಕ್ತಿಗಳು ತೆರವು ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹುಲಿವಾನ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ಹಂಚಿಕೆ ಮಾಡಲು ಗ್ರಾಮ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ. ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸಬೇಕು. ಹುಲಿವಾನ ಗ್ರಾಮದ ಸರ್ವೇ ನಂ. ೯೩ರ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಬೇಕು. ಎಸ್.ಐ. ಕೋಡಿಹಳ್ಳಿ ಗ್ರಾಮದ ಸರ್ವೇ ನಂ. ೫೪ರ ಸ್ಮಶಾನ ಒತ್ತುವರಿ ತೆರವು ಮಾಡಿ ರಸ್ತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
೧ಕೆಎಂಎನ್ಡಿ-೫