ಗಜೇಂದ್ರಗಡ: ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ರೋಣ ಮತ್ತು ನರೇಗಲ್ ಬ್ಲಾಕ್ ಕಾಂಗ್ರೆಸ್ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಶನಿವಾರ ಕೆಪಿಸಿಸಿ ಅಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ ಬಳಿಕ ಪಟ್ಟಣದ ಜಿ.ಕೆ. ಬಂಡಿ ಗಾರ್ಡನ್ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಇಲ್ಲಿನ ಕಾಲಕಾಲೇಶ್ವರ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮಾತನಾಡಿ, ಜಿ.ಎಸ್. ಪಾಟೀಲರು ೫ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಂಡು ಜನಮಾನಸದಲ್ಲಿ ಛಾಪು ಮೂಡಿಸಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡುವಾಗ ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರನ್ನು ಕಡೆಗಣಿಸಲಾಗಿದೆ ಎಂದರು.ಈ ಬಾರಿ ಸಚಿವ ಸಂಪುಟದಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ರೋಣ, ನರೇಗಲ್ ಬ್ಲಾಕ್ ಕಾಂಗ್ರೆಸ್ ಮೂಂಚೂಣಿ ಘಟಕದ ಪದಾಧಿಕಾರಿಗಳು ನೀಡಿರುವ ಸಾಮೂಹಿಕ ರಾಜೀನಾಮೆ ಪತ್ರಗಳನ್ನು ಅಂಗೀಕರಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ರಾಷ್ಟ್ರ ರಾಜಧಾನಿ ದೆಹಲಿಗೆ ತಲುಪಿಸುತ್ತೇವೆ ಎಂದು ಎಚ್ಚರಿಸಿದರು.