ಕನ್ನಡಪ್ರಭ ವಾರ್ತೆ ಹನೂರು
ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.18 ಸಾಮೂಹಿಕ ವಿವಾಹ ನಡೆಯಲಿರುವುದರಿಂದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆ ಕ್ರಮ ಕೈಗೊಂಡಿದೆ.ಮಾದಪ್ಪನ ಸನ್ನಿಧಿಯಲ್ಲಿ ಕಂಕಣ ಭಾಗ್ಯ:ಮಲೆ ಮಾದೇಶ್ವರ ಬೆಟ್ಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಾಂಪ್ರದಾಯದಂತೆ ಸಾಮೂಹಿಕ ವಿವಾಹ ನಡೆಸಿಕೊಂಡು ಬರುತ್ತಿದ್ದು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆ. 18 ರಂದು ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಾಮೂಹಿಕ ಉಚಿತ ಮದುವೆ ಕಾರ್ಯಕ್ರಮದಲ್ಲಿ 95 ಜೋಡಿಗಳು ಭಾಗವಹಿಸಲಿದ್ದಾರೆ. ರಾಜ್ಯ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಜೋಡಿಗಳಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. 16 ಜೋಡಿಗಳು ಅಂತರ್ಜಾತಿ ವಿವಾಹ ಕಾರ್ಯಕ್ರಮದಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.
ಮಾದಪ್ಪನ ಸನ್ನಿಧಿಯ ಮುಂಭಾಗದಲ್ಲಿ ಬರುವ ರಂಗ ಮಂದಿರದಲ್ಲಿ ಆ.18 ರಂದು 95 ಜೋಡಿಗಳು ಬೆಳಗ್ಗೆ 9:20 ರಿಂದ 10. 10ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು ವಧುವಿಗೆ ಚಿನ್ನದ ತಾಳಿ, ಕಾಲುಂಗುರ, ಸೀರೆ ರವಿಕೆ ಮತ್ತು ವರನಿಗೆ ಶರ್ಟು, ಪಂಚೆ, ಟವಲ್, ಪೇಟವನ್ನು ವಧು ವರರಿಗೆ ನೀಡಲಾಗುವುದು.ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಆ. 18ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಸಚಿವರು ಹಾಗೂ ಶಾಸಕರುಗಳನ್ನು ಬೆಂಗಳೂರಿನಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ. ರಘು ಭೇಟಿ ನೀಡಿ ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಾತನಾಡಿ, ಸುತ್ತೂರು ಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹಾಗೂ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.