ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಸಿಎಂ ಹೆಸರಿಗೆ ಮಸಿ ಬಳೆಯಲು ಪ್ರಜಾಪ್ರಭುತ್ವದ ಕಗ್ಗೊಲೆ : ರಾಜ್ಯಪಾಲರ ಕ್ರಮ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

KannadaprabhaNewsNetwork | Updated : Aug 19 2024, 01:18 PM IST

ಹುಮನಾಬಾದ್ ಪಟ್ಟಣದಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅಂಜುಮ್ ತಬಸುಮ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

  ಹುಮನಾಬಾದ್ :  ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳೆಯುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ರಾಜ್ಯಪಾಲರು ಹೊರಟಿದ್ದಾರೆ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಆರೋಪಿಸಿದರು.

ರಾಜ್ಯಪಾಲರ ಕ್ರಮ ಖಂಡಿಸಿ, ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ನಡೆದ ಪ್ರತಿಭಟನೆಯಲ್ಲಿ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅಂಜುಮ್ ತಬಸುಮ್‌ಗೆ ಸಲ್ಲಿಸಿ ಮಾತನಾಡಿ ಅವರು, ಜನಪರ ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಮೂಲಕ ಜನರಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಮುಡಾ ಹಗರಣದ ವಿಷಯವಾಗಿ ಸಿದ್ದರಾಮಯ್ಯನವರ ವಿರುದ್ಧ ಪ್ರೊಸಿಕ್ಯೂಷನ್‌ಗೆ ಅನುಮತಿ ನೀಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರ ನಿರ್ದೇಶನದಂತೆ ರಾಜ್ಯಪಾಲರಾದ ಥಾವರ್‌ಚೆಂದ್‌ ಗೆಹಲೋತ್‌ ಅವರು ವರ್ತಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಲಾಗಿದೆ. ರಾಜಭವನವನ್ನು ದುರುಪಯೋಗ ಪಡಿಸಿಕೊಂಡು ಒಳಸಂಚು ರೂಪಿಸಲಾಗಿದೆ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಈ ಆದೇಶ ಹೊರಡಿಸುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಕಾಪಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ನಾಗಣ್ಣ ಕಟ್ಟಿ, ಬಸವೇಶ್ವರ ವೃತ್ತ, ಬಾಲಾಜಿ ಮಂದಿರ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮಾರ್ಗವಾಗಿ ಡಾ.ಅಂಬೇಡ್ಕರ್ ವೃತ್ತದ ವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಾ.ಅಂಬೇಡ್ಕರ್ ವೃತ್ತದ ಬಳಿ ಟೈರ್‌ಗಳಿಗೆ ಬೆಂಕಿ ಹಚ್ಚಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಎಂಎಲ್‌ಸಿ ಭೀಮರಾವ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಫ್ಸರಮಿಯಾ, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಓಂಕಾರ ತುಂಬಾ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್, ಜಿಪಂ. ಮಾಜಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಜಿಪಂ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ತಾಪಂ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ತಾಪಂ ಮಾಜಿ ಸದಸ್ಯರಾದ ಶ್ರೀಮಂತ ಪಾಟೀಲ್, ಬಾಬು ಟೈಗರ್, ಪ್ರಮುಖರಾದ ದತ್ತಕುಮಾರ ಚಿದ್ರಿ, ಶಿವರಾಜ ಚೀನಕೇರಿ, ಅಶೋಕ ಸೊಂಡೆ, ಮಹಾದೇವ ಗಂಗಶಟ್ಟಿ, ಪ್ರದೀಪ ಪಸರಗಿ, ರಾಹುಲ್ ಉದ್ದಾ, ಶ್ರೀಕಾಂತ ಜಮಗಿ ಸೇರಿದಂತೆ ಅನೇಕರಿದ್ದರು.