ಭಧ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ಅವೈಜ್ಞಾನಿಕವಾಗಿ ಪೈಪ್ಲೈನ್ ಅಳವಡಿಸಿರುವುದು ದಾವಣಗೆರೆ ಜಿಲ್ಲೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮರ್ಮಾಘಾತವಾಗಿದ್ದು ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ರೈತರ ಒಕ್ಕೂಟದಿಂದ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೆ.9ರ ಮಂಗಳವಾರ ಅಚ್ಚುಕಟ್ಟು ಪ್ರದೇಶದ ರೈತರ ಸಭೆ ಕರೆಯಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಭಧ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ಅವೈಜ್ಞಾನಿಕವಾಗಿ ಪೈಪ್ಲೈನ್ ಅಳವಡಿಸಿರುವುದು ದಾವಣಗೆರೆ ಜಿಲ್ಲೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮರ್ಮಾಘಾತವಾಗಿದ್ದು ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ರೈತರ ಒಕ್ಕೂಟದಿಂದ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೆ.9ರ ಮಂಗಳವಾರ ಅಚ್ಚುಕಟ್ಟು ಪ್ರದೇಶದ ರೈತರ ಸಭೆ ಕರೆಯಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು
ಅವರು ಮಂಗಳವಾರ ನಡೆಯಲಿರುವ ರೈತರ ಸಭೆಯ ಹಿನ್ನೆಲೆಯಲ್ಲಿ ಕುಂದೂರಿನಲ್ಲಿ ಮುಖಂಡರೊಂದಿಗೆ ಸ್ಥಳ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿ ಮಾತನಾಡಿದರು.
ಭದ್ರಾನಾಲೆ ಸೀಳಿ ಬೇರೆ ಜಿಲ್ಲೆಗೆ ಕುಡಿಯುವ ನೀರು ಕೊಡುವ ವಿಚಾರಕ್ಕೆ ನಮ್ಮ ವಿರೋಧ ಖಂಡಿತ ಇಲ್ಲ, ಯಾರೂ ಕುಡಿಯುವ ನೀರಿಗೆ ವಿರೋಧ ಮಾಡಬೇಡಿ ಎಂದು ಕೋರ್ಟ್ ಸಹ ಹೇಳಿದೆ,ಆದರೆ ನಮ್ಮ ವಿರೋಧ ಇರೋದು ನಾಲೆ ಸೀಳಿ ಅವೈಜ್ಞಾನಿಕವಾಗಿ ಪೈಪ್ ಲೈನ್ ಅಳವಡಿಸಿ ನೀರು ತೆಗೆದುಕೊಂಡು ಹೋಗುವುದಕ್ಕೆ ಎಂದು ಸ್ಪಷ್ಟಪಡಿಸಿದರು.
ಹೊಸದುರ್ಗ, ಹೊಳಲ್ಕೆರೆ ಹಾಗೂ ಹಿರಿಯೂರಿಗೆ ಹಾಗೂ ಚಿಕ್ಕಮಂಗಳೂರು ಜಿಲ್ಲೆಯ ಕೆಲ ತಾಲೂಕಿಗೆ ನೀರು ಕೊಟ್ಟರೆ,ನಮ್ಮ ಜಿಲ್ಲೆಯ ರೈತರ ಪರಿಸ್ಥಿತಿ ಏನಾಗಬೇಕು ಹೇಳಿ, ತಮ್ಮ ಜಮೀನಿನನ್ನು ಹೇಗೆ ಉಳಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು.
ಭದ್ರೆಯಿಂದ ನೀರು ತೆಗೆದುಕೊಂಡು ಹೋಗುತ್ತಿರುವ ಕ್ರಮ ಸರಿಯಲ್ಲ,ನಮ್ಮ ಜಿಲ್ಲೆಗೆ ಅನ್ಯಾಯ ಆಗುತ್ತಿದೆ,ಕೂಡಲೇ ನ್ಯಾಯ ಒದಗಿಸಿ ಎಂದು ನಾವುಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಟ್ಟೆವು, ಆದರೂ ನಮ್ಮ ಜಿಲ್ಲೆಯ ರೈತರಿಗೆ ನ್ಯಾಯ ಸಿಗಲಿಲ್ಲ, ಕಾಂಗ್ರೆಸ್ ಸರ್ಕಾರ ಅನ್ನದಾತರ ಸರ್ಕಾರ ಅಲ್ಲ, ಈ ಸರ್ಕಾರ ಕುರ್ಚಿ ಉಳಿಸಿಕೊಳ್ಳುವ ಸರ್ಕಾರ, ಇವರಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕುಡಿಯುವ ನೀರಿಗೆ ವಿರೋಧ ಮಾಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ನಾವು ಎಂದಿಗೂ ಕುಡಿಯುವ ನೀರು ತೆಗೆದುಕೊಂಡು ಹೋಗುವುದಕ್ಕೆ ವಿರೋಧ ಮಾಡುತ್ತಿಲ್ಲ ಎಂದು ಹಲವಾರು ಬಾರಿ ಸ್ಪಷ್ಟಪಡಿಸಿದ್ದೇವೆ ಎಂದರು.
ಬಿಜೆಪಿ ಹಿರಿಯ ಧುರೀಣ ಮಾಜಿ ಸಚಿವ ಎಸ್.ಎಸ್.ರವೀಂದ್ರನಾಥ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಅಚ್ಚುಕಟ್ಟು ಪ್ರದೇಶದ ರೈತರು, ರೈತ ಮುಖಂಡರು, ಹಾಲಿ-ಮಾಜಿ ಜನಪ್ರತಿನಿಧಿಗಳು, ರೈತ ಒಕ್ಕೂಟದ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮಾಯಕೊಂಡ ಮಾಜಿ ಶಾಸಕ ಬಸವರಾಜನಾಯ್ಕ್, ಬಿಜೆಪಿ ತಾಸೂಕು ಅರಕೆರೆ ನಾಗರಾಜ್, ನೆಲಹೊನ್ನೆ ಮಂಜುನಾಥ್, ಕುಂದೂರು ಅನಿಲ್,ರಮೇಶ್ಗೌಡ,ಕೂಲಂಬಿ ಸಿದ್ದಲಿಂಗಪ್ಪ, ಧನಂಜಯ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.