ಕನ್ನಡಪ್ರಭ ವಾರ್ತೆ ರಾಯಬಾಗ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರೊ.ಎಂ.ಡಿ.ನಂಜುಂಡಸ್ವಾಮಿ ರೈತ ಸಂಘ ರಾಯಬಾಗ ತಾಲೂಕು ಘಟಕದಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ತಹಸೀಲ್ದಾರ್ ಕಚೇರಿಗೆ ಪಾದಯಾತ್ರೆ ನಡೆಸಿ, ಪ್ರತಿಭಟಿಸಲಾಯಿತು.
ಮಾಜಿ ಸಚಿವ ಶಶಿಕಾಂತ ನಾಯಿಕ ಮಾತನಾಡಿ, ಈಗಾಗಲೇ ಹುಬ್ಬಳ್ಳಿ ಧಾರವಾಡ ಕೈಗಾರಿಕೆ ವಲಯಕ್ಕೆ ನವಿಲತೀರ್ಥ ಜಲಾಶಯದಿಂದ ನೀರು ಒದಗಿಸಲಾಗುತ್ತಿದೆ. ಈಗ ಹಿಡಕಲ್ ಜಲಾಶಯದಿಂದ ಮತ್ತೆ ನೀರು ಒದಗಿಸಿದರೆ ಬೆಳಗಾವಿ ಜಿಲ್ಲೆಯ ಜನರು ಮತ್ತು ರೈತರು ನೀರಿನ ಅಭಾವ ಎದುರಿಸಬೇಕಾಗುತ್ತದೆ. ಕೂಡಲೇ ಈ ಕಾಮಗಾರಿ ನಿಲ್ಲಿಸದೇ ಇದ್ದರೆ ಬೆಳಗಾವಿ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರು ಕೂಡಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಫೆ.25ರಂದು ಹುಕ್ಕೇರಿಯಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.ರಾಜ್ಯ ರೈತ ಮುಖಂಡ ಮಲ್ಲಿಕಾರ್ಜುನ ವಾಲಿ ಮಾತನಾಡಿ, ಕಾರ್ಖಾನೆಗಳ ಮಾಲೀಕರೊಂದಿಗೆ ಕೂಡಿಕೊಂಡಿರುವ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ. ಕಾರ್ಖಾನೆ ಮಾಲೀಕರ ಹಿತಾಸಕ್ತಿಗಾಗಿ ರೈತರ ಮತ್ತು ಜನರ ಹಿತವನ್ನು ಬಲಿ ಕೊಡ್ತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿಡಕಲ್ ಜಲಾಶಯ ಈ ಭಾಗದ ರೈತರ ಜೀವ ನಾಡಿಯಾಗಿದೆ. ಈ ಜಲಾಶಯದಿಂದ ಹುಬ್ಬಳ್ಳಿ ಧಾರವಾಡ ಕೈಗಾರಿಕೆ ವಲಯಕ್ಕೆ ನೀರು ಹರಿಸಿದರೆ, ಈ ಭಾಗದ ಜನ ಜಾನುವಾರುಗಳಿಗೆ ಮತ್ತು ರೈತರು ಮುಂಬರುವ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಎದುರಿಸುವುದು ನಿಶ್ಚಿತ ಎಂದರು. ಈ ಕಾಮಗಾರಿ ಕೈ ಬಿಡದೇ ಇದ್ದರೆ ಸರ್ಕಾರದ ವಿರುದ್ಧ ಜಿಲ್ಲಾದ್ಯಾಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.