ಹಿಡಕಲ್‌ ಡ್ಯಾಂ ನೀರು ಪೂರೈಕೆ ವಿರೋಧಿಸಿ ಭಾರೀ ಪ್ರತಿಭಟನೆ

KannadaprabhaNewsNetwork |  
Published : Feb 25, 2025, 12:49 AM IST
ರಾಯಬಾಗ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರೊ.ಎಂ.ಡಿ.ನಂಜುಂಡಸ್ವಾಮಿ ರೈತ ಸಂಘ ರಾಯಬಾಗ ತಾಲೂಕು ಘಟಕದಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ತಹಸೀಲ್ದಾರ್‌ ಕಚೇರಿಗೆ ಪಾದಯಾತ್ರೆ ನಡೆಸಿ, ಪ್ರತಿಭಟಿಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಬಾಗ

ಹಿಡಕಲ್‌ ರಾಜಾ ಲಖಮಗೌಡ ಜಲಾಶಯದಿಂದ ಅನಧಿಕೃತವಾಗಿ ಹುಬ್ಬಳ್ಳಿ- ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಸರಬರಾಜು ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟಿಸಿ, ತಹಸೀಲ್ದಾರ್‌ ಸುರೇಶ ಮುಂಜೆ ಮೂಲಕ ಸಚಿವ ಸತೀಶ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರೊ.ಎಂ.ಡಿ.ನಂಜುಂಡಸ್ವಾಮಿ ರೈತ ಸಂಘ ರಾಯಬಾಗ ತಾಲೂಕು ಘಟಕದಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ತಹಸೀಲ್ದಾರ್‌ ಕಚೇರಿಗೆ ಪಾದಯಾತ್ರೆ ನಡೆಸಿ, ಪ್ರತಿಭಟಿಸಲಾಯಿತು.

ಮಾಜಿ ಸಚಿವ ಶಶಿಕಾಂತ ನಾಯಿಕ ಮಾತನಾಡಿ, ಈಗಾಗಲೇ ಹುಬ್ಬಳ್ಳಿ ಧಾರವಾಡ ಕೈಗಾರಿಕೆ ವಲಯಕ್ಕೆ ನವಿಲತೀರ್ಥ ಜಲಾಶಯದಿಂದ ನೀರು ಒದಗಿಸಲಾಗುತ್ತಿದೆ. ಈಗ ಹಿಡಕಲ್‌ ಜಲಾಶಯದಿಂದ ಮತ್ತೆ ನೀರು ಒದಗಿಸಿದರೆ ಬೆಳಗಾವಿ ಜಿಲ್ಲೆಯ ಜನರು ಮತ್ತು ರೈತರು ನೀರಿನ ಅಭಾವ ಎದುರಿಸಬೇಕಾಗುತ್ತದೆ. ಕೂಡಲೇ ಈ ಕಾಮಗಾರಿ ನಿಲ್ಲಿಸದೇ ಇದ್ದರೆ ಬೆಳಗಾವಿ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರು ಕೂಡಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಫೆ.25ರಂದು ಹುಕ್ಕೇರಿಯಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯ ರೈತ ಮುಖಂಡ ಮಲ್ಲಿಕಾರ್ಜುನ ವಾಲಿ ಮಾತನಾಡಿ, ಕಾರ್ಖಾನೆಗಳ ಮಾಲೀಕರೊಂದಿಗೆ ಕೂಡಿಕೊಂಡಿರುವ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ. ಕಾರ್ಖಾನೆ ಮಾಲೀಕರ ಹಿತಾಸಕ್ತಿಗಾಗಿ ರೈತರ ಮತ್ತು ಜನರ ಹಿತವನ್ನು ಬಲಿ ಕೊಡ್ತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿಡಕಲ್ ಜಲಾಶಯ ಈ ಭಾಗದ ರೈತರ ಜೀವ ನಾಡಿಯಾಗಿದೆ. ಈ ಜಲಾಶಯದಿಂದ ಹುಬ್ಬಳ್ಳಿ ಧಾರವಾಡ ಕೈಗಾರಿಕೆ ವಲಯಕ್ಕೆ ನೀರು ಹರಿಸಿದರೆ, ಈ ಭಾಗದ ಜನ ಜಾನುವಾರುಗಳಿಗೆ ಮತ್ತು ರೈತರು ಮುಂಬರುವ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಎದುರಿಸುವುದು ನಿಶ್ಚಿತ ಎಂದರು. ಈ ಕಾಮಗಾರಿ ಕೈ ಬಿಡದೇ ಇದ್ದರೆ ಸರ್ಕಾರದ ವಿರುದ್ಧ ಜಿಲ್ಲಾದ್ಯಾಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ತಾಲೂಕಾಧ್ಯಕ್ಷ ವಿಜಯ ಶ್ರೇಷ್ಠಿ, ಮಾಯಗೌಡಾ ಪಾಟೀಲ , ರಾಯಗೌಡಾ ಪಾಟೀಲ, ನಿಜಗುಣಿ ನಾವಿ, ಸತ್ಯಪ್ಪ ರಾಮತೀರ್ಥ, ಗುರುನಾಥ ಹೆಗಡೆ, ಮಹಾಲಿಂಗ ಹಂಜಿ, ತ್ಯಾಗರಾಜ ಕದಮ, ಶ್ರೀಶೈಲ ಸಾಬಾನೆ, ಅಪ್ಪಾಸಾಹೇಬ ಮಾನೆ, ಈರಗೌಡ ಪಾಟೀಲ, ಸಾವಂತ ಕೊಚೇರಿ, ದಿಲೀಪ ಸಮಾಜೆ, ರಾಮು ಬಸ್ತವಾಡೆ , ಸುಲ್ತಾನ ಪೂಜೇರಿ, ಕಲಗೌಡಾ ಪಾಟೀಲ, ಮಾಯಪ್ಪ ಲೋಕೂರೆ, ರಮೇಶ್ ಪಾಟೀಲ, ಶ್ರವಣಕುಮಾರ ದೇವಮಾನ ಸೇರಿದಂತೆ ನೂರಾರು ರೈತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

.ರಾಜ್ಯದ ಕಾಂಗ್ರೆಸ್‌ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ
ಪೂರ್ಣಾವಧಿ ಸಿಎಂ ಆಗುವ ವಿಶ್ವಾಸ ಇದೆ : ಸಿಎಂ ಸಿದ್ದರಾಮಯ್ಯ