ಮಡಿಕೇರಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಸೆಕ್ಷನ್ 4 ಮತ್ತು ಸಿ ಅಂಡ್ ಡಿ ಲ್ಯಾಂಡ್ ವರದಿ ವಿರೋಧಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಸೇರಿದಂದ ವಿವಿಧ ಸಂಘಟನೆಗಳಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.
ಪೊಲೀಸರ ಹರಸಾಹಸ: ಏಕಾಏಕಿ ರಸ್ತೆ ತಡೆ ನಡೆದ ಹಿನ್ನೆಲೆ ಆರಂಭದಲ್ಲಿ ಪೊಲೀಸರು ಕೂಡ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಬಳಿಕ ಜಿಲ್ಲಾಧಿಕಾರಿ ಸೋಮಶೇಖರ್, ಕೊಡಗು ಎಸ್ಪಿ ಬಿಂದುಮಣಿ, ಶಾಸಕ ಮಂತರ್ ಗೌಡ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ರೈತರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಲಾಯಿತು. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸುತ್ತಿದ್ದಂತೆ, ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪರಿಸರ ರಕ್ಷಣೆ ಹೆಸರಲ್ಲಿ ಕೃಷಿಗೆ ಅಡ್ಡಿಕಸ್ತೂರಿರಂಗನ್ ವರದಿ ಜಾರಿಯಾದರೆ ಕೊಡಗಿನ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಎದುರಾಗಬಹುದು ಎಂಬ ಆತಂಕವನ್ನು ರೈತರು ವ್ಯಕ್ತಪಡಿಸಿದರು. ಕೊಡಗಿನ ನೆಲ, ಜಲ, ಕೃಷಿ ಹಾಗೂ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ. ಸುರೇಶ್, ಮುಖಂಡರಾದ ದೀಪಕ್, ಸುರೇಶ್ ಚಕ್ರವರ್ತಿ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಎಂ.ಎಲ್.ಸಿ ಎಸ್.ಜಿ. ಮೇದಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ನಾವು ರೈತರ ಪರ ಇದ್ದೇವೆ : ಮಂತರ್ ಗೌಡ
ರೈತರು, ಜನರಿಗೆ ವಿವಿಧ ಕಾಯಿದೆಗಳು, ವರದಿಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿಯಿಂದ ರೈತರಲ್ಲಿ ಆತಂಕ ಮೂಡಿದ್ದು, ಇಡೀ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಈ ಸಂದರ್ಭ ಮುಂದಿನ ದಿನಗಳಲ್ಲಿ ವಿಶೇಷ ಅಧಿವೇಶನವನ್ನು ಕರೆಯಲಾಗಿದ್ದು, ಈ ವರದಿಯನ್ನು ತಿರಸ್ಕರಿಸಿ ನಿರ್ಣಯ ತೆಗೆದುಕೊಂಡು ವರದಿಯನ್ನು ಕೇಂದ್ರಕ್ಕೆ ಕಳುಹಿಸಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 53 ಗ್ರಾಮಗಳು ಗುರುತಿಸಿದ್ದು, ಇದನ್ನು ತಿರಸ್ಕಾರ ಮಾಡಬೇಕೆಂದು ನಾವು ಒತ್ತಾಯಿಸಿದ್ದೇವೆ. ಅರಣ್ಯ ರಕ್ಷಣೆ ಮಾಡುವುದರೊಂದಿಗೆ ರೈತರ ಬದುಕನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.