ಕನ್ನಡಪ್ರಭ ವಾರ್ತೆ ಬೆಂಗಳೂರು
ಗುರುವಾರ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ, ನಿರ್ದೇಶಕರು ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದರು.
ಎಐಟಿಯುಸಿ ಎಂ.ಜಯಮ್ಮ ಮಾತನಾಡಿ, ‘1975ರಿಂದ ಸೇವೆ ಸಲ್ಲಿಸಿ ಕಾಲಕಾಲಕ್ಕೆ ನಿವೃತ್ತಿಯಾದ ಎಲ್ಲಾ ಅಂಗನಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಕಡ್ಡಾಯವಾಗಿ ಗ್ರಾಚ್ಯುಟಿ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ಕರ್ನಾಟಕ ಸರ್ಕಾರ 2023ರ ಏ.1ರಿಂದ ನಿವೃತ್ತಿಯಾದವರಿಗೆ ಅನ್ವಯವಾಗುವಂತೆ ಗ್ರಾಚ್ಯುಟಿ ನೀಡುವ ಕುರಿತು ಆದೇಶಿರುವುದು ಸಮಂಜಸವಲ್ಲ. ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಗ್ರಾಚ್ಯುಟಿ ನೀಡುವ ಆದೇಶ ಮಾಡಬೇಕು’ ಎಂದು ಒತ್ತಾಯಿಸಿದರು.‘ಬೆಲೆಯೇರಿಕೆಗೆ ತಕ್ಕಂತೆ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಸಹಾಯಕಿಯರಿಗೆ ₹10,000 ಗೌರವಧನ ಹೆಚ್ಚಿಸಬೇಕು. ಹಾಗೂ ನಿವೃತ್ತರಾದವರಿಗೆ ₹3 ಲಕ್ಷ ಇಡುಗಂಟು ನೀಡುವ ಯೋಜನೆ ಜಾರಿಗೊಳಿಸಬೇಕು’ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯ ವಿ.ನಾಗರತ್ನ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಎಂ.ಉಮಾದೇವಿ ಇದ್ದರು.