ಕನ್ನಡಪ್ರಭ ವಾರ್ತೆ ಚಾಮರಾಜನಗರ
ರೈತರ ಕೃಷಿ ಪಂಪ್ ಸೆಟ್ಗಳಿಗೆ ಸ್ಮಾರ್ಟ್ ಕಾರ್ಡ್, ಡಿಜಿಟಲ್ ಮೀಟರ್ ಅಳವಡಿಸುವ ಸರ್ಕಾರದ ಕ್ರಮ ಖಂಡಿಸಿ ರೈತ ಸಂಘದ ರಾಜ್ಯಾಧ್ಯಕ್ಷ ಡಾ. ವಾಸುದೇವ ಮೇಟಿ ಆದೇಶದ ಮೇರಗೆ ಮೇ ೧೫ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇಂಧನ ಮಂತ್ರಿ ಶವಯಾತ್ರೆ ಮುಖಾಂತರ ಕಾರ್ಯಪಾಲಕ ಅಭಿಯಂತರರು, ಬೆಸ್ಕಾಂ ಕಚೇರಿಗಳ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಡಾ. ಗುರುಪ್ರಸಾದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು ರೈತರ ಕೃಷಿ ಪಂಪ್ ಸೆಟ್ಗಳಿಗೆ ಸ್ಮಾರ್ಟ್ ಕಾರ್ಡ್, ಡಿಜಿಟಲ್ ಮೀಟರ್ ಅಳವಡಿಸುವ ಮೂಲಕ ರೈತರನ್ನು ಶೋಷಿಸುತ್ತಿದೆ, ಇದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರ ರೈತರ ಕೃಷಿ ಪಂಪ್ ಸೆಟ್ಗಳಿಗೆ ಸ್ಮಾರ್ಟ್ ಕಾರ್ಡ್, ಡಿಜಿಟಲ್ ಮೀಟರ್ ಅಳವಡಿಸಲು ರು.೧೦,೦೦೦ಗಳ ಡಿಪೋಜಿಟ್ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಮಾಡಿರುವ ಯತ್ನವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು,ರೈತರಿಗೆ ವಿದ್ಯುತ್ ಪರಿಕರಣಗಳನ್ನು ಅಕ್ರಮ-ಸಕ್ರಮ ಅಡಿಯಲ್ಲಿ ಈ ಹಿಂದೆ ನೀಡಿದ್ದಂತೆಯೇ ನೀಡಬೇಕು, ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ್ ಜೋಡಣೆ ಮಾಡುವುದನ್ನು ನಿಲ್ಲಿಸಬೇಕು. ರೈತರ ಜಮೀನಿನಲ್ಲಿ ೩-೪ ಬೋರ್ವೆಲ್ಗಳು ಇದ್ದು, ಆಧಾರ್ ಕಾರ್ಡ್ ಜೋಡಣೆ ಮಾಡುವುದರಿಂದ ರೈತರ ಬದುಕು ದುಸ್ತರವಾಗುತ್ತದೆ. ಸರ್ಕಾರದಿಂದ ಬರುವ ಸೌಲಭ್ಯಗಳು ನಿಲ್ಲುತ್ತವೆ ಎಂದರು.ಸರ್ಕಾರದ ಶೀಘ್ರ ಯೋಜನೆ ಅಡಿಯಲ್ಲಿ ಟಿ.ಸಿ.ಗಳನ್ನು ಮಾತ್ರ ನೀಡಲಿದ್ದು, ಉಳಿದ ಕಂಬ ಮತ್ತು ವೈರ್ಗಳನ್ನು ರೈತರು ಸ್ವಂತ ಖರ್ಚಿನಿಂದ ಮಾಡಿಸಲು ಸಾಧ್ಯವೇ ಇಲ್ಲ. ಸರ್ಕಾರವೇ ಉಚಿತವಾಗಿ ನೀಡಬೇಕು. ಸೋಲಾರ್ ಪಂಪ್ ಸೆಟ್ಗಳ ಮುಖಾಂತರ ೫೦೦ ಆಡಿ ಇಂದ ೧೨೦೦ ಅಡಿ ಇರುವ ಬೋರ್ವೆಲ್ ಗಳಲ್ಲಿ ನೀರನ್ನು ಮೇಲೆ ಎತ್ತಲು ಸಾಧ್ಯವೇ ಎಂದರು. ಜಮೀನಿನಲ್ಲಿ ವಾಸಿಸುತ್ತಿರುವ ರೈತರಿಗೆ ಸಂಜೆ ೬.೦೦ ಗಂಟೆಯಿಂದ ಬೆಳಿಗ್ಗೆ ೬.೦೦ ಗಂಟೆಯವರೆಗೆ ಕೆಲವು ಭಾಗದ ರೈತರಿಗೆ ವಿದ್ಯುತ್ ನೀಡುತ್ತಿದ್ದು, ಇನ್ನು ಕೆಲವು ಭಾಗದ ರೈತರ ವಿದ್ಯುತ್ಯನ್ನು ನೀಡುತ್ತಿಲ್ಲ. ಆದ್ದರಿಂದ ಎಲ್ಲಾ ಭಾಗದ ರೈತರಿಗೂ ಸಮರ್ಪಕ ವಿದ್ಯುತ್ ನೀಡಬೇಕು.
ಬೆಸ್ಕಾಂನವರು ೧೧ ಕೆ.ವಿ ಮತ್ತು ಎಲ್.ಟಿ. ಲೈನ್ಗಳಲ್ಲಿ ಬೆಳೆದಿರುವ ಗಿಡ ಮರಗಳು ಸುಮಾರು ೧೫ ವರ್ಷಗಳಿಂದ ಬೆಳೆದಿದ್ದು, ವಿದ್ಯುತ್ ತಾಗಿ ಲೈನ್ ವೈರ್ ಸುಟ್ಟುಹೋಗುತ್ತವೆ, ಕೃಷಿ ಪಂಪ್ಸೆಟ್, ಟಿ.ಸಿ.ಮೋಟಾರ್, ಕೇಬಲ್ಗಳು ಸುಟ್ಟು ರೈತರಿಗೆ ಲಕ್ಷಾಂತರ ರು.ಬೆಳೆನಷ್ಟವಾಗುತ್ತಿದೆ ಎಂದರು. ಪ್ರತಿಭಟನೆಗೆ ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಮಟ್ಟದ ಎಲ್ಲಾ ಪದಾಧಿಕಾರಿಗಳು ಆಗಮಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾಡ್ರಹಳ್ಳಿ ಮಹದೇವಪ್ಪ, ಕುಂದಕೆರೆ ಸಂಪತ್, ಚಿಕ್ಕಣ್ಣ, ನಾಗರಾಜು ಇದ್ದರು.