ಹೊಸಪೇಟೆ: ಆಧುನಿಕ ಭಾರತದ ನವ ನಿರ್ಮಾಣಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಅತ್ಯಂತ ಅವಶ್ಯಕವಾಗಿವೆ. ಸಮಾಜದ ವಿವಿಧ ವಲಯಗಳಲ್ಲಿ ಅವರ ಚಿಂತನೆಗಳನ್ನು ಅನ್ವಯಿಸಿ ದೇಶದ ಭವಿಷ್ಯ ರೂಪಿಸಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಹೇಳಿದರು.
ಅಂಬೇಡ್ಕರ್ ಅವರನ್ನು ಕೇವಲ ಹೋರಾಟಗಾರರಾಗಿ ಅಥವಾ ಹಕ್ಕುಗಳ ಪ್ರತಿಪಾದಕರಾಗಿ ಮಾತ್ರ ನೋಡದೇ, ಸಮಾಜಕ್ಕೆ ಉತ್ತಮ ದಾರಿ ತೋರಿದ ಮಾರ್ಗದರ್ಶಕರಾಗಿ ಗುರುತಿಸಬೇಕು ಎಂದು ಅವರು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಅಂಬೇಡ್ಕರ್ ಅವರ ಕುರಿತು ಹತ್ತು ಪುಸ್ತಕಗಳನ್ನು ಪ್ರಕಟಿಸುತ್ತಿದೆ. ಅವುಗಳನ್ನು ಸದ್ಯದಲ್ಲಿಯೇ ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ, ರಿಸರ್ವ್ ಬ್ಯಾಂಕ್ ಪರಿಕಲ್ಪನೆ ಸೇರಿದಂತೆ ಮಹಿಳೆಯರ ಹಕ್ಕುಗಳ ಸ್ಥಾಪನೆಗೂ ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವ ಎಂಬ ಮೌಲ್ಯಗಳನ್ನು ಸಂವಿಧಾನದಲ್ಲಿ ಪ್ರತಿಷ್ಠಾಪಿಸಿದ ಮಹಾನ್ ಚೇತನರಾಗಿದ್ದ ಅಂಬೇಡ್ಕರ್, ಮನುಷ್ಯರ ಸರ್ವತೋಮುಖ ಅಭಿವೃದ್ಧಿಗಾಗಿ ಸದಾ ಕನಸು ಕಂಡಿದ್ದರು ಎಂದು ಅವರು ಹೇಳಿದರು.