-ಅಬ್ಬೆತುಮಕೂರಿನ ಸೀಮಾಂತರದ ಭೀಮಾ ನದಿಯ ತಟದಲ್ಲಿ ಶ್ರೀಮಠದಿಂದ ಹೊಳಿ ಜಾತ್ರೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಒಕ್ಕಲಿಗ ಚೆನ್ನಾಗಿದ್ದರೆ ನಾಡೆಲ್ಲ ಚೆನ್ನಾಗಿರುತ್ತದೆ, ಸಂಕ್ರಾಂತಿ ಹಬ್ಬ ರೈತರ ಪಾಲಿಗೆ ಸುಗ್ಗಿಯ ಹಿಗ್ಗನ್ನು ತರುವ ಹಬ್ಬವಾಗಿದೆ. ರೈತ ಉತ್ತಿ ಬಿತ್ತಿ ಬೆಳೆದ ಫಸಲನ್ನು ರಾಶಿ ಮಾಡಿಕೊಳ್ಳುವ ಸಂದರ್ಭದಲ್ಲಿ ಬರುವ ಸಂಕ್ರಾಂತಿ ಆತನ ಬದುಕಿನ ಬೆಳಕಾಗಿ ಈ ಹಬ್ಬ ಸಂಭ್ರಮವನ್ನು ತರುವಂತಾಗಲಿ ಎಂದು ಅಬ್ಬೆತುಮಕೂರಿನ ಪೀಠಾಧಪತಿ ಡಾ. ಗಂಗಾಧರ ಮಹಾಸ್ವಾಮಿಗಳು ನುಡಿದರು.ಶ್ರೀಮಠದ ವತಿಯಿಂದ ಸಮೀಪದ ಅಬ್ಬೆತುಮಕೂರಿನ ಸೀಮಾಂತರದ ಭೀಮಾ ನದಿಯ ತಟದಲ್ಲಿ ಹಮ್ಮಿಕೊಂಡಿದ್ದ ಹೊಳಿ ಜಾತ್ರೆಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ನೂತನ ವರ್ಷದ ಮೊದಲ ಹಬ್ಬವಾಗಿರುವ ಸಂಕ್ರಾಂತಿ ರೈತರ ಬದುಕಿಗೆ ಸಮೃದ್ಧಿಯನ್ನು ತರುವ ಹಬ್ಬವಾಗಿದೆ. ಈ ಹಬ್ಬ ಅನ್ನದಾತ ರೈತ ಜನಾಂಗಕ್ಕೆ ಹಿಗ್ಗನ್ನು ತರಲಿ ಎಂದು ಶುಭ ಹಾರೈಸಿದರು.
ಇದಕ್ಕೂ ಮುನ್ನ ಶ್ರೀಗಳು ಅಪಾರ ಭಕ್ತ ವೃಂದದೊಂದಿಗೆ, ಅಬ್ಬೆತುಮಕೂರಿನ ಶ್ರೀಮಠದಿಂದ ಸೀಮಾಂತರದ ಭೀಮಾನದಿ ಯವರೆಗೆ ಡೊಳ್ಳು, ಹಲಗೆ, ಬಾಜಾ ಭಜಂತ್ರಿ, ವಿವಿಧ ಮಂಗಲ ವಾದ್ಯಗಳು ಮತ್ತು ಸುಮಂಗಲೆಯರ ಕಳಸದೊಂದಿಗೆ ಮೆರವಣಿಗೆಯಲ್ಲಿ ನದಿ ತಟಕ್ಕೆ ತೆರಳಿದರು. ಅಲ್ಲಿ ಶ್ರೀಗಳು ಹೂವಿನಿಂದ ಅಲಂಕೃತವಾದ ತೆಪ್ಪದಲ್ಲಿ ಭೀಮಾನದಿಯ ಮಧ್ಯಭಾಗಕ್ಕೆ ತೆರಳಿ ಪುಣ್ಯ ಸ್ನಾನವನ್ನು ಮಾಡಿ ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿ ಗಂಗಾದೇವಿಗೆ ವಿಶೇಷ ಪೂಜೆ ನೆರವೇರಿಸಿದರು.
ನಂತರ ಹೊಳಿ ಜಾತ್ರಗೆ ಆಗಮಿಸಿದ ಎಲ್ಲ ಭಕ್ತರು ಬಿಳಿ ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಶೇಂಗಾ ಹೋಳಿಗೆ, ಕರಿಗಡಬು, ಪುಂಡಿಪಲ್ಯ, ಹಿಂಡಿಪಲ್ಯ, ಎಣ್ಣೆ ಬದನೆಕಾಯಿ, ಶೇಂಗಾ ಹಿಂಡಿ, ಬಜ್ಜಿ, ಭರ್ತಾ, ಚಿತ್ರಾನ್ನ. ಹೀಗೆ ವಿವಿಧ ಬಗೆಯ ಸಂಕ್ರಾಂತಿಯ ಭಕ್ಷ ಭೋಜನವನ್ನು ಸವಿದರು. ಜಾತ್ರೆಯಲ್ಲಿ ರಟಗಲ್ದ ಲಾವಣ್ಯ ಮೆಲೋಡಿಸ್ಟ್ ಕಲಾ ತಂಡದವರು ನಡೆಸಿಕೊಟ್ಟ ಗೀತಗಾಯನ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
----