ಭಟ್ಕಳ: ಪಟ್ಟಣದ ಆನಂದಶ್ರಮ ಪ್ರೌಢ ಶಾಲೆಯಲ್ಲಿ ಕಸಾಪದಿಂದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ನಿವೃತ್ತ ಶಿಕ್ಷಕ ಹಾಗೂ ಸಹಕಾರಿ ಧುರೀಣ ಡಿ ಬಿ ನಾಯ್ಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕನ್ನಡ ನಾಡು ನುಡಿಯ ಅಭಿಮಾನ ಸದಾ ಜೀವಂತವಾಗಿರಬೇಕು. ವಿದ್ಯಾರ್ಥಿಗಳ ಸಾಧನೆಗೆ ಅವರ ಪರಿಶ್ರಮದ ಜೊತೆಗೆ ಶಿಕ್ಷಕರ ಬೆಂಬಲ, ಪಾಲಕರ ಪ್ರೋತ್ಸಾಹ ಕೂಡ ಗಮನಾರ್ಹ. ವಿದ್ಯಾರ್ಥಿಗಳು ಸಾಹಿತ್ಯ ಪರಿಷತ್ತಿನ ಈ ಪ್ರೋತ್ಸಾಹದಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಬೇಕು ಎಂದರು.ಕಸಾಪ ಮಕ್ಕಳ ಜೊತೆಗೆ ಭಾಷ ಶಿಕ್ಷಕರನ್ನು ಕೂಡ ಅಭಿನಂದಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ ಈ ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಕನ್ನಡಿಗರ ಪ್ರಾಥಮಿಕ ಸಂಸ್ಥೆಯಾದ ಪರಿಷತ್ತು ನೀಡುವ ಪುರಸ್ಕಾರಕ್ಕೆ ತನ್ನದೇ ಆದ ಘನತೆ ಇದೆ ಎಂದರು.
ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ ಪ್ರಶಂಸನಾ ಪತ್ರ ಪ್ರಧಾನ ಮಾಡಿದರು. ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ, ಸಾಹಿತಿ ಮಾನಾಸುತ ಶಂಭು ಹೆಗಡೆ, ಸ್ಪಂದನ ಸಂಸ್ಥೆಯ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಸಾಹಿತಿ ನಾರಾಯಣ ಯಾಜಿ ಶಿರಾಲಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯಕ ಹಾಗೂ ಆನಂದಾಶ್ರಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ವಿನುತಾ ಡಿಸೋಜ, ಹೊನ್ನಾವರ ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್. ಗೌಡ, ಉಪಸ್ಥಿತರಿದ್ದರು.ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಸಾಪ ಗೌರವಕೋಶಾಧ್ಯಕ್ಷ ಶ್ರೀಧರ್ ಶೇಟ್ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ ನಿರೂಪಿಸಿದರು. ಗಣೇಶ ಯಾಜಿ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಪೆಟ್ರಿಕ್ ಟೆಲಿಸ್, ಪೂರ್ಣಿಮಾ ಮುರುಡೇಶ್ವರ, ಗಣೇಶ್ ಕೃಷ್ಣ ಮೊಗೇರ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಸಾಪದಿಂದ ವಿವಿಧ ಶಾಲೆಗಳ 75 ವಿದ್ಯಾರ್ಥಿಗಳು ಹಾಗೂ 18 ಭಾಷಾ ಶಿಕ್ಷಕರನ್ನು ಅಭಿನಂದಿಸಲಾಯಿತು.
ಭಟ್ಕಳ ಕಸಾಪನಿಂದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿರುವುದು.