ಚಿತ್ರದುರ್ಗ: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ನಡುವೆ ಸಮನ್ವಯ ಅಗತ್ಯವಾಗಿದೆ. ದುರ್ಬಲ ಕಾಲಮಿತಿಯಲ್ಲಿ ನ್ಯಾಯ ದೊರಕಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಅನು ಶಿವರಾಮನ್ ಪ್ರತಿಪಾದಿಸಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಾನೂನು ಸೇವಾ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕು ಎಂಬ ಸದುದ್ದೇಶದಿಂದ 1985ರ ಕಾಯ್ದೆಯಡಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಸ್ಥಾಪಿಸಲಾಗಿದೆ. ಇದರಡಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರಮಟ್ಟದಲ್ಲಿ ರೂಪಿಸಿರುವ ಯೋಜನೆಗಳನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕೆಲಸವನ್ನು ಯಾಂತ್ರಿಕವಾಗಿ ಶಿಷ್ಟಾಚಾರದ ಹಿನ್ನೆಲೆಯಲ್ಲಿ ನಿರ್ವಹಿಸದೇ, ಮಾನವೀಯ ಕಳಕಳಿಯೊಂದಿಗೆ ನಿರ್ವಹಿಸಬೇಕು ಎಂದರು. ಕರ್ನಾಟಕ ವಿಶಾಲವಾಗಿದ್ದು, ಪ್ರತಿಯೊಂದು ಜಿಲ್ಲೆಯಲ್ಲಿಯೂ ವಿಭಿನ್ನ ರೀತಿಯ ಸಮಸ್ಯೆಗಳು ಇವೆ. ಇದನ್ನು ಅರಿತು ಪ್ರತಿಯೊಂದು ಜಿಲ್ಲಾಮಟ್ಟದ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸಬೇಕು. ನ್ಯಾಯಾಧೀಶರ ಕರ್ತವ್ಯಕ್ಕಿಂತಲೂ ಕಾನೂನು ಸೇವಾ ಪ್ರಾಧಿಕಾರದ ಕರ್ತವ್ಯಗಳು ಭಿನ್ನವಾಗಿವೆ. ಜಿಲ್ಲಾ ಮಟ್ಟದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗ ನಿರ್ವಹಿಸಬೇಕಾದ ಆಡಳಿತಾತ್ಮಕ ಕೆಲಸಗಳ ಮೇಲ್ವಿಚಾರಣೆಯೊಂದಿಗೆ, ಸಂವಿಧಾನದ ಆಶಯ ಈಡೇರಿಸುವಲ್ಲಿ, ನ್ಯಾಯವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಕೆಲಸವನ್ನು ಕಾನೂನು ಸೇವಾ ಪ್ರಾಧಿಕಾರಗಳು ಮಾಡಬೇಕು. ಈ ಹಿನ್ನೆಲೆಯಲ್ಲಿಯೇ ರಾಜ್ಯದ ಹೃದಯ ಭಾಗದಲ್ಲಿರುವ ಚಿತ್ರದುರ್ಗ ನಗರದಲ್ಲಿ ಎಲ್ಲಾ ಜಿಲ್ಲೆಗಳ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ತಿಳಿಸಿದರು.ಕಾನೂನು ಸೇವಾ ಪ್ರಾಧಿಕಾರ ನ್ಯಾಯ ಸಿಗದ ಅಸಹಾಯಕ ಮತ್ತು ತುಳಿತಕ್ಕೊಳಗಾದ ಜನರ ಸೇವೆಗಾಗಿ ಇದ್ದು, ಕಾನೂನು ನೆರವು ಪಡೆಯುವುದು ಅವರ ಹಕ್ಕು ಮತ್ತು ಅದನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಬಹಳಷ್ಟು ವೇಳೆ ನೊಂದವರಿಗೆ ಸಕಾಲದಲ್ಲಿ ನ್ಯಾಯ ಹಾಗೂ ಪರಿಹಾರ ದೊರಕುವುದಿಲ್ಲ. ಈ ವ್ಯವಸ್ಥೆ ಬದಲಾಗಬೇಕು. ನ್ಯಾಯಾಲಯಗಳು ನೀಡುವ ಪರಿಹಾರದ ಆದೇಶಗಳನ್ನು ಸಕಾಲದಲ್ಲಿ ಜಾರಿಯಾಗಬೇಕೆಂದರು.