ಹರಪನಹಳ್ಳಿ; ಪಟ್ಟಣದಜನದಟ್ಟಣೆಇರುವ ಕಡೆಗಳಲ್ಲಿ ಹೆಚ್ಚಿನ ಸಿಬ್ಬಂದಿ ನೇಮಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಿಪಿಐ ನಾಗರಾಜ ಎಂ. ಕಮ್ಮಾರ ಹೇಳಿದರು.
ಪಟ್ಟಣದ ಪುರಸಭೆ ಮುಂಭಾಗದಿಂದ ತಾಯಿ ಹುಣಸೆ ಮರದವರೆಗೆ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ನಿಗದಿತ ಸ್ಥಳಗಳಲ್ಲಿ ವಾಹನ ಸವಾರರು ವಾಹನ ನಿಲುಗಡೆ ಮಾಡಬೇಕು. ಸಿಸಿ ಕ್ಯಾಮೆರಾ ಇಲ್ಲದ ಕಡೆ ಸಿಸಿ ಕ್ಯಾಮೆರಾ ಅಳವಡಿಸಲಾಗವುದು, ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದರು.
ಆಟೋ ಚಾಲಕರು ಸಮವಸ್ತ್ರ ಧರಿಸದೇ ಇದ್ದಲ್ಲಿ ಐಎಂವಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.ಪಟ್ಟಣದಲ್ಲಿ ಬೆಳಗಿನ ಶಾಲಾ ಅವಧಿಯಲ್ಲಿ ಅದರಲ್ಲೂ ಐ.ಬಿ. ವೃತ್ತದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಿರುಗಾಡುವುದರಿಂದ ಅಲ್ಲಿ ಸಿಬ್ಬಂದಿ ನಿಯೋಜಿಸಿ, ಸುಗಮ ಸಂಚಾರ ಕೈಗೊಳ್ಳಲಾಗುವುದು ಎಂದರು.
ಸಾರ್ವಜನಿಕರು ಯಾವುದೇ ರೀತಿಯ ಸಮಸ್ಯೆಗಳು ಕಂಡು ಬಂದಲ್ಲಿ ಕೂಡಲೇ ಇಲಾಖೆಯ ಸಹಾಯವಾಣಿ 112ಕ್ಕೆ ಕರೆ ಮಾಡುವಂತೆ ತಿಳಿಸಿದರು.ಪುರಸಭೆ ಸದಸ್ಯ ಜಾಕೀರ್ ಸರ್ಖಾವಸ್, ಎಐಟಿಯುಸಿ ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ್, ಕುಂಚೂರು ಇಬ್ರಾಹಿಂ, ಗೋಣೆಪ್ಪ, ಚಂದ್ರಪ್ಪ ಸೇರಿದಂತೆ ಸಾರ್ವಜನಿಕರು, ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಪೋಲಿಸ್ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಪಿಎಸ್ಐ ಡಿ.ರುದ್ರಪ್ಪ, ಅರಸೀಕೆರಿ ಪಿಎಸ್ಐ ರಂಗಯ್ಯ, ಚಿಗಟೇರಿ ಪಿಎಸ್ಐ ನಾಗರತ್ನ, ಹಲುವಾಗಲು ಪಿಎಸ್ಐ ಕಿರಣ್ಕುಮಾರ ಸೇರಿದಂತೆ ಇತರರು ಇದ್ದರು.ಹರಪನಹಳ್ಳಿ ಪೋಲಿಸ್ ಠಾಣೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಿಪಿಐ ನಾಗರಾಜ ಎಂ.ಕಮ್ಮಾರ ಮಾತನಾಡಿದರು.