ಹಾವೇರಿ: ಡಿ. ದೇವರಾಜ ಅರಸು ಅವರು ರಾಜ್ಯ ಕಂಡ ಧೀಮಂತ ನಾಯಕರಾಗಿದ್ದು, ಅವರ ಜನ್ಮವನ್ನು ಆ. 20ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿ. ದೇವರಾಜ ಅರಸು ಅವರ ಕುರಿತು ಶಾಲಾ-ಕಾಲೇಜು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಭಾಷಣ, ಪ್ರಬಂಧ ಸ್ಪರ್ಧೆ ಆಯೋಜಿಸಲು, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲು ತೀರ್ಮಾನಿಸಲಾಯಿತು.
ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಡಿ. ದೇವರಾಜ ಅರಸು ಅವರ ಜನ್ಮ ದಿನ ಆಚರಣೆ ಮಾಡಲು ಆದೇಶ ಹೊರಡಿಸುವಂತೆ ಆಯಾ ಇಲಾಖೆ ಮುಖಸ್ಥರಿಗೆ ನಿರ್ದೇಶನ ನೀಡಿದರು.ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಯಶಸ್ವಿಯಾಗಿ ಆಚರಣೆ ಮಾಡಬೇಕು. ಮೆರವಣಿಗೆ ಉತ್ತಮ ಕಲಾತಂಡಗಳ ನಿಯೋಜನೆಗೆ, ಉಪನ್ಯಾಸಕರ ಆಯ್ಕೆ ಹಾಗೂ ಶಿಷ್ಟಾಚಾರ ಪ್ರಕಾರ ಆಮಂತ್ರಣ ಪತ್ರಿಕೆ ತಯಾರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.