ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಕಳೆದ 2 ದಿನಗಳ ಹಿಂದೆ ಆಕಸ್ಮಿಕ ಅಗ್ನಿ ಅವಘಡದಿಂದಾದ ಹಾನಿಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ, ಅಗ್ನಿ ಅವಘಡದಿಂದ ಉಂಟಾದ ಹಾನಿ ಪರಿಶೀಲಿಸಿ, ಬಾಧಿತ ಕುಟುಂಬಗಳಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ಭಾನುವಾರ ರಾತ್ರಿ ಶೆಡ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಅಗ್ನಿ ನಂದಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮುಳುಗಡೆ ಪ್ರದೇಶವಾದ ಇದ್ದಲಗಿ ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಹಕ್ಕುಪತ್ರ ವಿತರಣೆ ಹಾಗೂ ಪುನರ್ವಸತಿ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯದಲ್ಲಿ ಸ್ವಲ್ಪ ವಿಳಂಬವಾಗಿದೆ. ಶೀಘ್ರದಲ್ಲಿಯೇ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.ಸ್ಥಳಾಂತರ ಸಂದರ್ಭದಲ್ಲಿ ಪ್ರತಿ ಕುಟುಂಬಕ್ಕೆ ಒಂದು ಗುಂಟೆ ಬದಲಿಗೆ ನಾಲ್ಕು ಗುಂಟೆ ಜಾಗ ನೀಡಬೇಕೆಂಬುದು ಸಂತ್ರಸ್ತರ ಪ್ರಮುಖ ಬೇಡಿಕೆಯಾಗಿದೆ. ಸಂತ್ರಸ್ತರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು, ಈಗಿರುವ ಆದೇಶದಲ್ಲಿ ಅಗತ್ಯ ತಿದ್ದುಪಡಿ ಮಾಡಿಸಿ ನಾಲ್ಕು ಗುಂಟೆ ಜಾಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಸೆ.4ರಂದು ಮುಖ್ಯಮಂತ್ರಿಗಳು ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಜಿಲ್ಲೆಗೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಇದ್ದಲಗಿ ಸಂತ್ರಸ್ತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ನೇರವಾಗಿ ತಂದು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.
ಅಗ್ನಿ ಅವಘಡದಿಂದ ಮನೆಗಳಲ್ಲಿದ್ದ ದವಸ-ಧಾನ್ಯ, ಬಟ್ಟೆ-ಬರೆ ಹಾಗೂ ಅಗತ್ಯ ದಾಖಲೆಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅಧಿಕಾರಿಗಳಿಂದ ಸಮಗ್ರವಾಗಿ ಹಾನಿ ಪರಿಶೀಲನೆ ನಡೆಸಿದ ಬಳಿಕ ಸರ್ಕಾರದ ನಿಯಮಾನುಸಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಮುಳಗಡೆ ಪ್ರದೇಶವಾದ ಇದ್ದಲ್ಲಿ ಗ್ರಾಮದಲ್ಲಿ ವಿವಿಧ ಬೇಡಿಕೆ ಈಡೇರಿಕೆ ಹಿನ್ನಲೆಯಲ್ಲಿ ಮೇ 6ರಿಂದ ಹಮ್ಮಿಕೊಂಡ ಅನಿರ್ಧಷ್ಟ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಪರಿಹಾರಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಸೂಕ್ತ ಕ್ರಮವಹಿಸುವ ಭರವಸೆಯನ್ನು ಸಂತ್ರಸ್ತರಿಗೆ ನೀಡುವ ಮೂಲಕ ಧರಣಿಯನ್ನು ಅಂತ್ಯಗೊಳಿಸಿದರು.