ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯಸರ್ಕಾರ 2025ನೇ ಸಾಲಿಗೆ ನೀಡಲಾಗುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 70 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಗೆಯೇ ಮಾಧ್ಯಮ ಕ್ಷೇತ್ರದಲ್ಲಿ ಎಂ.ಸಿದ್ದರಾಜು ಅವರಿಗೆ ಪ್ರಶಸ್ತಿ ಒಲಿದಿದೆ.
ಎಂ.ಸಿದ್ದರಾಜು ಅವರು 1976-77ರಲ್ಲಿ ನವಭಾರತ ಪತ್ರಿಕೆಯಲ್ಲಿ ನಂತರ ಪಿಟಿಐಗೆ ಸೇರಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಿಟಿಐನ ಸೌಥ್ ಇಂಡಿಯಾ ಹೆಡ್ ಆಗಿ ಸೇವೆ ಸಲ್ಲಿಸಿದ್ದಾರೆ. ಜತೆಗೆ ನಾಲ್ಕು ಬಾರಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ 2016ರಲ್ಲಿ ಮಾಧ್ಯಮ ಆಕಾಡಮಿ ಅಧ್ಯಕ್ಷರಾಗಿದ್ದರು. ಈ ವೇಳೆ ಇಡೀ ಕರ್ನಾಟಕ ಸುತ್ತಾಡಿ ವಿನೂತನ ಕಾರ್ಯಕ್ರಮ ರೂಪಿಸಿದ್ದರು. ಎಂ.ಸಿದ್ದರಾಜು ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ.ಡಾ.ಎನ್.ಎಸ್.ರಾಮೇಗೌಡರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಡಾ.ಎನ್.ಎಸ್.ರಾಮೇಗೌಡ ಅವರು ಶಿಕ್ಷಣ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಹುಟ್ಟಿದ ರಾಮೇಗೌಡರು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಚನ್ನಪಟ್ಟಣದಲ್ಲಿ ಪಡೆದುಕೊಂಡರು. ಉನ್ನತ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದು ೧೯೭೪ರಲ್ಲಿ ರಾಜಸ್ತಾನದ ಜೋಧ್ಪುರ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಉಪನ್ಯಾಸಕರಾಗಿ, ಪ್ರೊಫೆಸರ್ ಆಗಿ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಭಾರತೀಕಾಲೇಜಿನಲ್ಲಿ ಪ್ರಾಂಶುಪಾಲರಾಗಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮಂಡ್ಯ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪ್ರತಿನಿಧಿ ಪ್ರಾದೇಶಿಕ ಪತ್ರಿಕೆ ಜಿಲ್ಲಾ ವರದಿಗಾರ ಬಿ.ಜೆ.ಸೋಮಶೇಖರ್ ಆಯ್ಕೆಯಾಗಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಬಸವನಹಳ್ಳಿಯ ಜವರಪ್ಪ ಹಾಗೂ ಲಕ್ಷ್ಮಮ್ಮರ 3ನೇ ಪುತ್ರ ಸೋಮಶೇಖರ್ ವಿವಿಧ ಪತ್ರಿಕೆಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಇವರ ಪತ್ರಿಕೋದ್ಯಮ ಸೇವೆ ಗುರುತಿಸಿ ಜಿಲ್ಲಾಡಳಿತ 2025-26 ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.