ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಕುಪ್ಪಹಳ್ಳಿ, ಹೊನ್ನೇನಹಳ್ಳಿ ಸೇರಿ ಗ್ರಾಮಗಳಲ್ಲಿ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್ ಮತ್ತು ಕಬ್ಬು ಅಭಿವೃದ್ಧಿ ಅಧಿಕಾರಿ ಕೆ.ಬಾಬುರಾಜ್ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಜಾಗೃತಿ ಸಭೆ ನಡೆಸುತ್ತಿದೆ.
ಕಬ್ಬು ಅಭಿವೃದ್ಧಿ ಅಧಿಕಾರಿ ಕೆ.ಬಾಬುರಾಜ್ ಮಾತನಾಡಿ, ಕಾರ್ಖಾನೆಯಿಂದ ಪರಿಸರ ವಿರೋಧಿ ಕೆಲಸ ಆಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಎಥೆನಾಲ್ ಘಟಕ ಸ್ಥಾಪಿಸಲು ಮುಂದಾಗಿದೆ ಎಂದರು.ಮಾರುಕಟ್ಟೆಯಲ್ಲಿ ಬೇಡಿಕೆಯಿರುವ ಎಥೆನಾಲ್ ಜೈವಿಕ ಇಂಧನವನ್ನು ಕಾರ್ಖಾನೆಯು ಉತ್ಪಾದಿಸುತ್ತದೆ, ಪೆಟ್ರೋಲ್ಗೆ ಪರ್ಯಾಯ ಇಂಧನವಾಗಿ ಎಥೆನಾಲ್ ಅನ್ನು ಬಳಸಿಕೊಳ್ಳಲು ಅವಕಾಶವಿದೆ. ಕಬ್ಬು ಬೆಳೆಗಾರರ ಹಿತವನ್ನುಗುರಿಯನ್ನಾಗಿಸಿಕೊಂಡು ಕಾರ್ಖಾನೆ ಕೆಲಸ ಮಾಡುತ್ತಿದೆ. ಆದರೆ, ಕೆಲವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಿವಿಗೊಡಬಾರದೆಂದು ಮನವಿ ಮಾಡಿದರು.
ಈ ಬಗ್ಗೆ ಕಬ್ಬು ಬೆಳೆಗಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ. ಮಾ.6ರಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಎಥೆನಾಲ್ ಘಟಕ ಆರಂಭ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ತಾಲೂಕಿನ ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಮನವಿ ಮಾಡಿದರು.
ಸಭೆಯಲ್ಲಿ ಕಾರ್ಖಾನೆ ಕಬ್ಬು ವಿಭಾಗದ ಸಹಾಯಕ ಅಧಿಕಾರಿ ದತ್ತಾತ್ರೇಯ, ಮಾಕವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಲರಾಮೇಗೌಡ, ಉಪಾಧ್ಯಕ್ಷ ಮಂಜುನಾಥ್, ಸಿಂಧಘಟ್ಟ ಗ್ರಾಪಂ ಮಾಜಿ ಅಧ್ಯಕ್ಷ ರವಿಕುಮಾರ್, ಬಂಡಿಹೊಳೆ ಗ್ರಾಪಂ ಮಾಜಿ ಅಧ್ಯಕ್ಷ ಕಾಯಿ ಮಂಜೇಗೌಡ, ದರ್ಶನ್, ಜಯರಾಮೇಗೌಡ, ಸಾಕ್ಷೀಬೀಡು ಕೃಷ್ಣೇಗೌಡ, ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳಾದ ವಡಕಹಳ್ಳಿ ಮಂಜೇಗೌಡ, ದೇವರಾಜೇಗೌಡ, ಸುರೇಶ್ ಸೇರಿದಂತೆ ಹಲವರು ಇದ್ದರು.