ವಿಶೇಷಚೇತನರಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸಿ

KannadaprabhaNewsNetwork | Published : Mar 21, 2025 12:30 AM

ವಿಶೇಷಚೇತನರಿಗೆ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರುವಿಶೇಷಚೇತನರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವರಿಗೆ ಸಿಗುವ ಸೌಲಭ್ಯವನ್ನು ಪಾರದರ್ಶಕವಾಗಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷಚೇತನರ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಶೇಷಚೇತನರಿಗೆ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಬೇಕು. ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಜಮೀನು ಗುರುತಿಸುವಂತೆ ಮೈಸೂರು ತಹಸೀಲ್ದಾರ್ ಅವರಿಗೆ ಸೂಚಿಸಿದರು.ಬಸ್ ಗಳಲ್ಲಿ ವಿಶೇಷಚೇತನರಿಗೆ ಮೀಸಲು ಇರುವ ಆಸನಗಳನ್ನು ಬಿಟ್ಟು ಕೊಡಬೇಕು. ಅದು ಅವರಿಗೆ ಇರುವ ಹಕ್ಕು. ಈ ಬಗ್ಗೆ ಕ್ರಮ ವಹಿಸುವಂತೆ ಸಾರಿಗೆ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.ಮಾಶಾಸನ ಬರದೆ ಇರುವವರ ಪಟ್ಟಿ ಪಡೆದು ನಿಯಮಾನುಸಾರ ಕ್ರಮವಹಿಸಿ ಅರ್ಹರಿಗೆ ಪನ್ಷನ್ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ವಿಶೇಷಚೇತನರು ವಸತಿ ಸೌಲಭ್ಯ ನೀಡುವಂತೆ ಸಲ್ಲಿಸಿದ್ದ ಮನವಿಯಂತೆ ಈ ಹಿಂದೆ ಇದ್ದ ಜಿಲ್ಲಾಧಿಕಾರಿ ವಸತಿ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದರು. ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಉಚಿತ ಬಸ್ ಪಾಸ್ ನೀಡಬೇಕು. ಬಸ್ ಗಳಲ್ಲಿ ಮಿಸಲು ಇರುವ ಆಸನಗಳನ್ನು ಬಿಟ್ಟು ಕೊಡಬೇಕು. ನಗರ ಪಾಲಿಕೆಯಲ್ಲಿ ಮೀಸಲು ಇರುವ ಶೇ. 5ರ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಆಗುತ್ತಿಲ್ಲ ಎಂದು ಮನವಿ ಮಾಡಿದರು.ವಿಶೇಷಚೇತನರಿಗೆ ತ್ರಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕು. ಕೆಲವರಿಗೆ ಪೆನ್ಷನ್ ಒಂದು ವರ್ಷದಿಂದ ಬರುತ್ತಿಲ್ಲ ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ಉಪ ಕಾರ್ಯದರ್ಶಿ ಪ್ರಭುಸ್ವಾಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಶಂಕರಗೌಡ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಕಲಚೇತನರು ಇದ್ದರು.