ಕೊಪ್ಪಳ: ಸೆ. 17ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಇಲಾಖಾವಾರು ಹಂಚಿಕೆ ಮಾಡಿರುವ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚಿಸಿದರು.
ಎನ್ಸಿಸಿ, ಎನ್ಎಸ್ಎಸ್ ಹಾಗೂ ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಸಬೇಕು. ಅಗ್ನಿಶಾಮಕ ವಾಹನ, ಆಂಬ್ಯುಲೆನ್ಸ್ ಹಾಗೂ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಜಿಪಂ ಸಭಾಂಗಣದಲ್ಲಿ ನಡೆದ ಗೌರಿ-ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸೆ. 14ರಂದು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ವಿಸರ್ಜನೆ ವರೆಗೆ ಶಾಂತಿ, ಸೌಹಾರ್ದತೆ ಕಾಪಾಡಬೇಕು. ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ಉಂಟುಮಾಡದಂತೆ ಹಬ್ಬ ಆಚರಿಸಬೇಕು. ಪೊಲೀಸ್ ಇಲಾಖೆಯ ಮಾರ್ಗಸೂಚಿ ಪಾಲಿಸಬೇಕು. ಡಿಜೆ ಧ್ವನಿಯ ಮಿತಿ, ವಿಸರ್ಜನೆಗೆ ನಿಗದಿತ ಸ್ಥಳ ಹಾಗೂ ಮೆರವಣಿಗೆ ಮಾರ್ಗವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.ಪಿಒಪಿ ಗಣೇಶ ಮೂರ್ತಿಗಳ ಬಳಕೆ ನಿಷೇಧಿಸಲಾಗಿದ್ದು, ಮಣ್ಣಿನ ಮೂರ್ತಿಗಳಿಗೆ ಆದ್ಯತೆ ನೀಡಬೇಕು. ಜಲಮೂಲಗಳ ಮಾಲಿನ್ಯ ತಪ್ಪಿಸಬೇಕು. ವಿದ್ಯುತ್ ಅವಘಡ ತಡೆಯಲು ಜೆಸ್ಕಾಂ ಅಧಿಕಾರಿಗಳು ಪ್ರತಿಷ್ಠಾಪನಾ ಸ್ಥಳಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ, ಸಹಾಯಕ ಆಯುಕ್ತ ಮಹಮ್ಮದ್ ಜಿಲಾನಿ ಉಪಸ್ಥಿತರಿದ್ದರು.