ರಟ್ಟೀಹಳ್ಳಿ ಪಪಂ ಅಧ್ಯಕ್ಷ, ಉಪಾಧ್ಯಕ್ಷರ ಸದಸ್ಯತ್ವ ಅನರ್ಹ

KannadaprabhaNewsNetwork |  
Published : Dec 02, 2025, 02:00 AM IST
1ಎಚ್‌ವಿಆರ್‌8, 8ಎ | Kannada Prabha

ಸಾರಾಂಶ

ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿದ್ದ ರವೀಂದ್ರ ಹಾಗೂ ಉಪಾಧ್ಯಕ್ಷರಾಗಿದ್ದ ಶಿವಕುಮಾರ ಉಪ್ಪಾರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಹಾವೇರಿ: ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿದ್ದ ರವೀಂದ್ರ ಹಾಗೂ ಉಪಾಧ್ಯಕ್ಷರಾಗಿದ್ದ ಶಿವಕುಮಾರ ಉಪ್ಪಾರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿಗೆ ಕಳೆದ ಆ.17ರಂದು ಚುನಾವಣೆ ನಡೆದಿತ್ತು. 15 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 7, ಬಿಜೆಪಿ 6 ಹಾಗೂ ಪಕ್ಷೇತರ 2 ಸದಸ್ಯರು ಆಯ್ಕೆಯಾಗಿದ್ದರು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಅ ವರ್ಗಕ್ಕೆ ಮೀಸಲಾಗಿತ್ತು. ಆದರೆ, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ್ದರಿಂದ ಅತಂತ್ರ ನಿರ್ಮಾಣವಾಗಿತ್ತು. ಚುನಾವಣೆಗೂ ಪೂರ್ವದಲ್ಲಿ ಈ ಇಬ್ಬರು ಪಕ್ಷೇತರರು ಕಾಂಗ್ರೆಸ್‌ ಬೆಂಬಲಿಸಿ ಆ ಪಕ್ಷವನ್ನು ಸೇರ್ಪಡೆಯಾಗಿದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿ ರವೀಂದ್ರ ಮುದಿಯಪ್ಪನವರ ಹಾಗೂ ಶಿವಕುಮಾರ ಉಪ್ಪಾರ ಅವರು ಬಿಜೆಪಿ ಬೆಂಬಲದೊಂದಿಗೆ ಕ್ರಮವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ರಟ್ಟೀಹಳ್ಳಿ ಪಪಂ ಚುಕ್ಕಾಣಿ ಹಿಡಿಯುವ ಕನಸು ಕಂಡಿದ್ದ ಕಾಂಗ್ರೆಸ್‌ಗೆ ನಿರಾಸೆಯಾಗಿತ್ತು. ಬಳಿಕ ಈ ಕುರಿತು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿ, ಈ ಇಬ್ಬರು ಪಕ್ಷ ಜಾರಿಗೊಳಿಸಿದ ವಿಪ್‌ ಉಲ್ಲಂಘಿಸಿದ ಕಾರಣಕ್ಕಾಗಿ ಪಕ್ಷಾಂತರ ನಿಷೇಧ ಕಾಯ್ಕೆಯಡಿ ಇವರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಕೋರಿದ್ದರು. ಈ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು, ಇಬ್ಬರ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆಯಡಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿಯ 4ನೇ ವಾರ್ಡಿನ ರವೀಂದ್ರ ಮುದಿಯಪ್ಪನವರ ಹಾಗೂ 9ನೇ ವಾರ್ಡಿನ ಶಿವಕುಮಾರ ಉಪ್ಪಾರ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಇಬ್ಬರ ಸದಸ್ಯತ್ವವನ್ನೂ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಕ್ಷಾಂತರಿಗಳಿಗೆ ಇದೊಂದು ದೊಡ್ಡ ಪಾಠವಾಗಿದೆ. ಇಬ್ಬರೂ ಕೂಡಲೇ ಅಧಿಕಾರ ತ್ಯಜಿಸಬೇಕು ಎಂದು ಜಿಲ್ಲಾ ಕಾಂಗ್ರೆಸೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ