ಕನ್ನಡಪ್ರಭ ವಾರ್ತೆ ಮೈಸೂರು
ತಾಲೂಕಿನ ಜಯಪುರ ಗ್ರಾಮದ ಮರಮ್ಮ ಸಿದ್ದೇಗೌಡ ಫಂಕ್ಷನ್ ಹಾಲ್ ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಶ್ರೀ ಅಷ್ಟಲಕ್ಷ್ಮೀ ಪೂಜಾಸಮಿತಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಸಾಮೂಹಿಕ ಶ್ರೀ ಅಷ್ಟಲಕ್ಷ್ಮೀ ಪೂಜೆ ಮತ್ತು ಧಾರ್ಮಿಕಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮೊದಲೆಲ್ಲಾ ಕುಟುಂಬ ನಿರ್ವಹಣೆ ಹೊರುತ್ತಿದ್ದರು. ಮಳೆಗಾಲ, ಚಳಿಗಾಲ ಎನ್ನದೆ ತಾವೇ ಎಲ್ಲ ಕೆಲಸ ಮಾಡುತ್ತಿದ್ದರು. ನಲ್ಲಿ, ಬೋರ್ ವೆಲ್ ಗಳು ಇರಲಿಲ್ಲ. ದೂರದಲ್ಲಿ ಇದ್ದ ಬಾವಿಗಳಿಂದ ನೀರು ಹೊತ್ತು ತರುತ್ತಿದ್ದರು. ಮಳೆಗಾಲದಲ್ಲಿ ಬಿಡುವು ಇಲ್ಲದಿದ್ದಾಗ ತಾವೇ ಎಲ್ಲ ಕೆಲಸ ಮಾಡಿಕೊಳ್ಳುತ್ತಿದ್ದರು. ಹಿಂದಿನ ಕಾಲದಲ್ಲಿ ಏಳೆಂಟು ಮಕ್ಕಳನ್ನು ಹೆಡೆದು ಸಾಕುತ್ತಿದ್ದರು. ಅಮೇಲೆ ಆರತಿಗೊಬ್ಬ- ಕೀರ್ತಿಗೊಬ್ಬ ಎನ್ನುವಂತೆ ಎರಡು ಮಕ್ಕಳಿಗೆ ಬಂದರು. ಈಗ ಒಂದು ಮಗುವಿಗೆ ಬಂದಿದ್ದಾರೆ ಎಂದು ಹೇಳಿದರು. ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಎರಡು ಹಸುಗಳನ್ನು ಖರೀದಿಸಿ ಸಾಕಿದರೆ ಬದುಕು ಸಾಗಿಸಬಹುದು. ಮಹಿಳೆಯರು ತಾವು ಸಂಪಾದನೆ ಮಾಡಿದ್ದನ್ನು ಕೂಡಿಡಬೇಕು. ಯಶಸ್ವಿನಿ ಯೋಜನೆಯಡಿ ವಿಮೆ ಮಾಡಿಸಬೇಕು. ಕೆಲವರು ಆಸ್ಪತ್ರೆಗೆ ಸೇರಿಸಿದ ಮೇಲೆ ನಮ್ಮತ್ರ ಹಣವಿಲ್ಲ, ಆಸ್ಪತ್ರೆಗೆ ಹೇಳಬೇಕು, ಹಣ ಕಟ್ಟಲು ದುಡ್ಡಿಲ್ಲ ಎನ್ನುತ್ತಾರೆ. ಅದರ ಬದಲಿಗೆ ಒಂದು ವಿಮೆ ಮಾಡಿಸಿದರೆ ಕುಟುಂಬದ ಆರೋಗ್ಯ ವೆಚ್ಚವನ್ನು ಭರಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.ಇಂದು ಅದ್ಧೂರಿ ಮದುವೆ ಮಾಡದೆ ಸರಳವಾಗಿ ಮಾಡಬೇಕು. ನನ್ನ ಇಬ್ಬರು ಹೆಣ್ಣು ಮಕ್ಕಳು, ಮಗನಿಗೆ ತಿರುಪತಿಯಲ್ಲಿ ಮದುವೆ ಮಾಡಿಸಿದೆ. ನನ್ನ ತಮ್ಮನ ಮಗನ ಮದುವೆಯನ್ನು ಧರ್ಮಸ್ಥಳದಲ್ಲಿ ಮಾಡಿಸಿದೆ. ಇರುವ ಜಮೀನು ಮಾರಿ ಅದ್ಧೂರಿ ಮದುವೆ ಮಾಡದೆ ಜಮೀನು ಉಳಿಸಿಕೊಳ್ಳಬೇಕು. ಸಾಲ-ಸೋಲ ಮಾಡಿ ಮದುವೆ, ಮನೆ ಕಟ್ಟುತ್ತಾರೆ. ನಂತರ, ಇರುವ ಜಮೀನು ಮಾರಿ ಕೂಲಿ ಕೆಲಸಕ್ಕೆ ಹೋಗುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಉಂಡುವಾಡಿ ಮತ್ತು ಕಬಿನಿ ನದಿ ಮೂಲದಿಂದ ಹೊರವಲಯದ ಪ್ರದೇಶಗಳು, ಹಳ್ಳಿಗಳಿಗೆ ನೀರು ಕೊಡಲು ಕಾಮಗಾರಿ ನಡೆಯುತ್ತಿದೆ. ಮುಂದಿನ ಒಂದು ವರ್ಷದೊಳಗೆ ಚಾಮುಂಡೇಶ್ವರಿ ಕ್ಷೇತ್ರದ 200ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದೇ ಒಂದು ದೊಡ್ಡ ಆಸ್ತಿಯಾಗಲಿದೆ. ತಮ್ಮ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಕೆಲವು ಹಾದಿ ತಪ್ಪಿದ ಮಕ್ಕಳ ಸಂಗಡ ಸೇರಿ ತಪ್ಪುದಾರಿಗೆ ಹೋಗುವುದನ್ನು ತಡೆಯಬೇಕು ಎಂದು ಕಿವಿಮಾತು ಹೇಳಿದರು.ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಹಳ್ಳಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಪ್ರಾಮಾಣಿಕವಾಗಿ ಮಂಜುನಾಥಸ್ವಾಮಿಯ ಮೇಲೆ ನಂಬಿಕೆ, ಭಕ್ತಿಯಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸುತ್ತಾರೆ. ಹಳ್ಳಿಗಳಲ್ಲಿ ಕೈ ಸಾಲ ಪಡೆಯುವುದು ತಪ್ಪಲು ಮೂಲ ಕಾರಣವಾಗಿದೆ ಎಂದರು. ಸಮಾಜದಲ್ಲಿರುವ ಅಬಲೆ ಮಹಿಳೆಯರನ್ನು ಸಬಲೆಯರನ್ನಾಗಿ ಮಾಡಲು ವಿದ್ಯಾವಂತ ಮಹಿಳೆಯರು ಯತ್ನಿಸಬೇಕು. ಒಬ್ಬರಿಗೊಬ್ಬರು ಸೇರಿಕೊಂಡು ಸಂಘಗಳ ರಚನೆ ಮಾಡಿದರೆ ಅದರಿಂದ ಕುಟುಂಬ, ಊರು ಅಭಿವೃದ್ಧಿ ಹೊಂದಬಹುದು ಎಂದರು.
ಸಾಮೂಹಿಕ ಶ್ರೀ ಅಷ್ಟಲಕ್ಷ್ಮೀ ಪೂಜಾಸಮಿತಿ ಅಧ್ಯಕ್ಷ ಜೆ.ಎಂ. ಜವರನಾಯಕ ಅಧ್ಯಕ್ಷತೆ ವಹಿಸಿದ್ದರು. ಬರಡನಪುರದ ಶ್ರೀಪರಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ, ಗ್ರಾಪಂ ಅಧ್ಯಕ್ಷ ಮಹದೇವಯ್ಯ, ಹಿರಿಯ ನಿರ್ದೇಶಕ ವಿ. ವಿಜಯಕುಮಾರ್ ನಾಗನಾಳ, ಗೋಪಾಲಪುರ ಗ್ರಾಪಂ ಮಾಜಿ ಅಧ್ಯಕ್ಷ ಜಿ.ಕೆ. ಬಸವೇಗೌಡ, ಜಯಪುರ ಗ್ರಾಪಂ ಉಪಾಧ್ಯಕ್ಷೆ ಮಂಗಳಮ್ಮ, ಬಸವಣ್ಣ, ಟಿ.ಜಿ. ಶ್ವೇತಾ, ಸೋಮಣ್ಣ, ಜಿ.ಎಂ. ನಾಗೇಶ್, ವೆಂಕಟೇಶ್ ಮೊದಲಾದವರು ಇದ್ದರು.