ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠರು ಸೌಹಾರ್ದದಿಂದ ಇದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ತಳಬುಡ ಇಲ್ಲ. ಅವರು ಕರಾಳ ದಿನ ಆಚರಣೆ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಅಖಂಡತೆ ಧಕ್ಕೆ ತರುವ, ಸಾಮರಸ್ಯ ಹಾಳು ಮಾಡುತ್ತಿರುವ ಎಂಇಎಸ್ ಸಂಘಟನೆ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ಹೆಸರು ನಾಮಕರಣ ಮಾಡಿ 50 ವರ್ಷಗಳಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ಕ್ಷಣ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ರಾಜ್ಯೋತ್ಸವದ ಅಂಗವಾಗಿ ಅದ್ಧೂರಿ ಮೆರವಣಿಗೆ ಆಯೋಜಿಸಿರುವುದು ಸಂತಸದ ಸಂಗತಿ. ಇಂತಹ ಆಚರಣೆಗಳಲ್ಲಿ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಕರೆ ನೀಡಿದರು.